ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1 ರಿಂದ 9ನೇ ತರಗತಿ ವಿದ್ಯಾರ್ಥಿಗಳೆಲ್ಲರೂ ಪಾಸ್; ಜೂ.15 ರಿಂದ ಹೊಸ ಶೈಕ್ಷಣಿಕ ವರ್ಷ

Last Updated 20 ಏಪ್ರಿಲ್ 2021, 10:25 IST
ಅಕ್ಷರ ಗಾತ್ರ

ಬೆಂಗಳೂರು:ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವುದರಿಂದ ಒಂದರಿಂದ ಒಂಬತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮೌಲ್ಯಾಂಕನ ವಿಶ್ಲೇಷಿಸಿ, ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಒಂದರಿಂದ ಐದನೇ ತರಗತಿ ಮತ್ತು ಆರರಿಂದ ಒಂಬತ್ತನೇ ತರಗತಿಗಳವರೆಗೆ ಮೌಲ್ಯಾಂಕನ ಕುರಿತು ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

1ರಿಂದ 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮದಲ್ಲಿ ನಿರ್ವಹಿಸಿದ ದಾಖಲೆಗಳು, ಸಂವಹನದ ಆಧಾರದ ಮೇಲೆ ಕೆಲವು ಶಾಲೆಯವರು ಆನ್‍ಲೈನ್ ಮೂಲಕ ತರಗತಿ ನಿರ್ವಹಿಸಿದ್ದರೆ, ಆ ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಮಕ್ಕಳಿಗೆ ನೀಡಿದ್ದ ಪ್ರಬಂಧ, ಗೃಹ ಕೆಲಸ ಇತರೆ ಚಟುವಟಿಕೆಗ ಆಧರಿಸಿದ ಕೃತಿ ಸಂಪುಟ, ಚೈಲ್ಡ್ ಪ್ರೊಫೈಲ್, ಇತರೆ ಲಭ್ಯ ದಾಖಲೆಗಳನ್ನು ಅವಲೋಕಿಸಿ ಈವರೆಗೆ ಪೂರೈಸಿದ ಪಠ್ಯವಸ್ತು, ಸಾಮರ್ಥ್ಯ, ಕಲಿಕಾ-ಫಲಗಳ ಸಾಧನೆ ಮತ್ತು ಕೊರತೆಗಳನ್ನು ಶಾಲಾ ಹಂತದಲ್ಲಿ ಸಿಸಿಇ ನಿಯಮಗಳಂತೆ ವಿಶ್ಲೇಷಿಸಿ ಪ್ರಗತಿ ಪತ್ರದಲ್ಲಿ ದಾಖಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ತರಗತಿಗೆ ಬಡ್ತಿ ನೀಡುವುದು ಮತ್ತು ಅದನ್ನು ಪ್ರಗತಿ ಪತ್ರದಲ್ಲಿ ದಾಖಲಿಸುವುದು ಸೇರಿದಂತೆ ಈ ಎಲ್ಲ ಪ್ರಕ್ರಿಯೆಗಳನ್ನು ಏ. 30ರೊಳಗೆ ನಿರ್ವಹಿಸಿ, ಫಲಿತಾಂಶ ದಾಖಲಿಸಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಒಂದರಿಂದ ಐದನೇ ತರಗತಿಗಳು: ಒಂದರಿಂದ ಐದನೇ ತರಗತಿವರೆಗೆ ಶಾಲಾ ಹಂತದಲ್ಲಿ ಮಕ್ಕಳ ಪ್ರಗತಿ ವಿಶ್ಲೇಷಿಸಿ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುವುದು. ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆನ್‍ಲೈನ್ ಇಲ್ಲವೇ ಆಫ್‍ಲೈನ್ ಮೂಲಕವೂ ಸಹ ಮೌಲ್ಯಾಂಕನ ಮಾಡಬಾರದು. ಮೌಲ್ಯಾಂಕನಕ್ಕಾಗಿ ಈ ಮಕ್ಕಳನ್ನು ಶಾಲೆಗಳಿಗೆ ಹಾಜರಾಗುವಂತೆ ಸೂಚಿಸಬಾರದು.

ಆರರಿಂದ ಒಂಬತ್ತನೇ ತರಗತಿಗಳು: ಈ ವಿದ್ಯಾರ್ಥಿಗಳು ನೇರವಾಗಿ ತರಗತಿಗಳಿಗೆ ಹಾಜರಾಗುತಿದ್ದರು. ಹಾಗೆಯೇ ದೂರದರ್ಶನ ಚಂದನ ವಾಹಿನಿಯ ಸಂವೇದ, ಇ-ಕಲಿಕಾ, ಆನ್‍ಲೈನ್ ಸೇರಿದಂತೆ ವಿವಿಧ ಪ್ರಕಾರದಲ್ಲಿ ಪಾಠ ಪ್ರವಚನ ಆಲಿಸಿರುವ ಹಿನ್ನಲೆಯಲ್ಲಿ ಈ ಮೇಲಿನ ಪಾಠ ಪ್ರವಚನ, ಕಲಿಕಾ ಪೂರಕ ಚಟುವಟಿಕೆ, ಪ್ರಾಜೆಕ್ಟ್ ಚಟುವಟಿಕೆಗಳ ನೆಲೆಯಲ್ಲಿ ಈಗಾಗಲೇ ಕೈಗೊಂಡಿರುವ ರೂಪಣಾತ್ಮಕ ಮೌಲ್ಯಮಾಪನ ಹಾಗೂ ಸಂಕಲನಾತ್ಮಕ ಮೌಲ್ಯಮಾಪನವನ್ನು ನಿರ್ವಹಿಸಿದ ದಾಖಲೆ ಆಧರಿಸಿ ಪಡೆದ ಅಂಕಗಳನ್ನು 100ಕ್ಕೆ ವೃದ್ಧಿಸಿ ಶ್ರೇಣಿ ನಮೂದಿಸಿ ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುತ್ತದೆ.

6ರಿಂದ 9ನೇ ತರಗತಿಗಳಿಗೆ 2020ರ ಆಗಸ್ಟ್ 4ರಿಂದ ಅಕ್ಟೋಬರ್ 10ರವರೆಗೆ ವಿದ್ಯಾಗಮ ತರಗತಿಗಳು ನಡೆದಿವೆ. 2021 ಜ. 29ರಿಂದ ಫೆಬ್ರವರಿ 1ರವರೆಗೆ 9 ಮತ್ತು 10ನೇ ತರಗತಿಗಳು ಪೂರ್ಣವಾಗಿ ನಡೆದಿವೆ. ಫೆ. 22ರಿಂದ ಬೆಂಗಳೂರು ನಗರ ಮತ್ತು ಕೇರಳ ಗಡಿ ಭಾಗದ ಪ್ರದೇಶಗಳ ಶಾಲೆಗಳಲ್ಲಿ ವಿದ್ಯಾಗಮ ತರಗತಿಗಳು ನಡೆದಿವೆ. ಉಳಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ಈ ಅವಧಿಯಲ್ಲಿ ಪೂರ್ಣಾವಧಿ ಭೌತಿಕ ತರಗತಿಗಳು ನಡೆದಿವೆ. ಆನ್‍ಲೈನ್ ಸೇರಿದಂತೆ ವಿವಿಧ ಪ್ರಕಾರದ ತರಗತಿಗಳು ನಡೆದಿವೆ. ಹೀಗಾಗಿ ಈ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಹಾಗೂ ಫಲಿತಾಂಶ ಪ್ರಕಟಣೆ ಮಾಡಲಾಗತ್ತದೆ. ಈ ಮಕ್ಕಳಿಗೂ ಪ್ರತ್ಯೇಕ ಆನ್‍ಲೈನ್‌, ಆಫ್‍ಲೈನ್ ಮೂಲಕ ಮೌಲ್ಯಾಂಕನ ಮಾಡಬಾರದು.

ಈ ಮೌಲ್ಯಾಂಕನದ ಉದ್ದೇಶ ವಿದ್ಯಾರ್ಥಿಗಳನ್ನು ಉತ್ತೀರ್ಣ, ಅನುತ್ತೀರ್ಣ ಎಂದು ತೀರ್ಮಾನಿಸುವುದಲ್ಲ. ಬದಲಾಗಿ ಅವರ ಕಲಿಕೆಯ ಪ್ರಗತಿ ಹಾಗೂ ಕೊರತೆಯನ್ನು ತಿಳಿದು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಸೇತು-ಬಂಧ ಕಾರ್ಯಕ್ರಮವನ್ನು ನಡೆಸಿ ಈ ಕೊರತೆ ತುಂಬಲು ಕ್ರಮ ವಹಿಸಲು ಶಾಲಾ ಯೋಜನೆಯನ್ನು ತಯಾರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

2021-22ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಪುನರಾರಂಭವಾದ ನಂತರ ಈ ಮಕ್ಕಳಿಗೆ ಕಳೆದ ಸಾಲಿನಲ್ಲಿ ಹಿಂದಿನ ತರಗತಿಯಲ್ಲಿನ ಕಲಿಕಾ ಸಾಮರ್ಥ್ಯಗಳ ಬಗ್ಗೆ ನೈದಾನಿಕ ಪರೀಕ್ಷೆ ನಡೆಸಿ ಅವರಲ್ಲಿ ಇರುವ ಕಲಿಕಾ ಕೊರತೆ ಗುರುತಿಸಲಾಗುವುದು. ಈ ಕೊರತೆಗಳು ಹಾಗೂ ಹಿಂದಿನ ವರ್ಷ ಪಟ್ಟಿ ಮಾಡಿ ಇಟ್ಟುಕೊಂಡಿದ್ದ ಕಲಿಕಾ ಕೊರತೆಗಳನ್ನು ಆಧರಿಸಿ ಪ್ರತಿ ಮಗುವಿನವಾರು ನಿರ್ದಿಷ್ಟ ತಂತ್ರಗಳನ್ನು ರೂಪಿಸಿ ಸೇತು-ಬಂಧ ಮುಖೇನ ಪರಿಹಾರ ಬೋಧನೆ ನಡೆಸುವುದು. ನಂತರ ಸಾಫಲ್ಯ ಪರೀಕ್ಷೆ ನಡೆಸಿ ಮಕ್ಕಳಲ್ಲಿ ಕಲಿಕೆ ಆಗಿರುವುದನ್ನು ದೃಢೀಕರಿಸಿ ಮುಂದಿನ ತರಗತಿಯ ಪಠ್ಯಾಧಾರಿತ ಕಲಿಕಾಂಶಗಳ ಬೋಧನೆ ಆರಂಭಿಸಲಾಗುತ್ತದೆ.

ಮೌಲ್ಯಾಂಕನ ಕುರಿತು ಸಭೆ: ಕಳೆದ ಸಾಲಿನಲ್ಲಿ ಮಕ್ಕಳನ್ನು ಪರೀಕ್ಷೆ ನಡೆಸದೇ ಬಡ್ತಿ ನೀಡಿದ ರೀತಿಯಲ್ಲಿ ಈ ಬಾರಿಯೂ ಹಾಗೆ ಮಾಡಿದಲ್ಲಿ ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದಾದ ಸಾಧ್ಯತೆಗಳಿರುವುದರಿಂದ ಸಂಕಲನಾತ್ಮಕ ಮೌಲ್ಯಂಕನಕ್ಕೆ ಅವಕಾಶ ನೀಡಬೇಕೆಂಬ ಖಾಸಗಿ ಶಾಲಾಡಳಿತ ಮಂಡಳಿಗಳ ಜೊತೆ ಸಭೆ ನಡೆಸಿ ಚರ್ಚೆ ನಡೆಸಲಾಗಿತ್ತು. ಮಕ್ಕಳ ತರಗತಿ/ವಾರ್ಷಿಕ ಮೌಲ್ಯಾಂಕನ/ಪರೀಕ್ಷೆ ಕುರಿತಂತೆ ಚರ್ಚಿಸಲು ಶಿಕ್ಷಕರ ಸಂಘಟನೆ, ಖಾಸಗಿ ಶಾಲೆಗಳ ಸಂಘಟನೆಗಳ ಪ್ರತಿನಿಧಿಗಳು, ಪೋಷಕರ ಪ್ರತಿನಿಧಿಗಳು ಮತ್ತು ಶಿಕ್ಷಣ ತಜ್ಞರ ಸಭೆಗಳನ್ನು ನಡೆಸಿ ಎಲ್ಲ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಮುಕ್ತವಾಗಿ ಚರ್ಚೆ ಅವಕಾಶ ಕಲ್ಪಿಸಲಾಗಿದೆ. ಮೌಲ್ಯಾಂಕನ ಮಾಡಿ ಆ ಮೂಲಕ ಅವರು ಸಾಧಿಸಿದ ಕಲಿಕಾ ಫಲಗಳನ್ನು ಹಾಗೂ ಸಾಧಿಸದೇ ಇರುವ ಕಲಿಕಾಂಶಗಳನ್ನು ಪತ್ತೆ ಹಚ್ಚಬೇಕು. ಆ ನಂತರ ಸಾಧಿಸದೇ ಇರುವ ಕಲಿಕಾಂಶಗಳ ಕೊರತೆಯನ್ನು ನೀಗಿಸಲು ‘ಸೇತುಬಂಧ’ (ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮದಂತಹ ವಿಶೇಷ ಪ್ರಯತ್ನಗಳನ್ನು ಹಮ್ಮಿಕೊಳ್ಳಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

* 1 ರಿಂದ 7ನೇ ತರಗತಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮೇ 1ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ಎಂದು ಘೋಷಿಸಲಾಗಿದೆ.

* ಜೂನ್ 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ.

* 8 ಮತ್ತು 9ನೇ ತರಗತಿ ಮಕ್ಕಳಿಗೆ ಮೇ 1ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಇದೆ. ಜುಲೈ 15ರಿಂದ ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತದೆ ಎಂದು ತಿಳಿಸಲಾಗಿದೆ.

* ಪ್ರೌಢ ಶಾಲೆಗಳಲ್ಲಿನ ಶಿಕ್ಷಕರಿಗೆ ಜೂನ್ 15ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಇರುತ್ತದೆ.

* ಜೂನ್ 21 ರಿಂದ ಜುಲೈ 5ರವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯುತ್ತವೆ.
ಆದರೆ, ಈ ವೇಳಾಪಟ್ಟಿ ತಾತ್ಕಾಲಿಕವಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆ ಮತ್ತು ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT