ಲಂಚ ಪಡೆದ ಆರೋಪ: ಕೃಷಿ ಸಚಿವ ಬಿ.ಸಿ. ಪಾಟೀಲ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು: ಕೃಷಿ ಇಲಾಖೆಯಿಂದ ರೈತರಿಗೆ ರಿಯಾಯ್ತಿ ದರದಲ್ಲಿ ವಿತರಿಸುವ ಯಂತ್ರೋಪಕರಣಗಳ ಖರೀದಿಯಲ್ಲಿ ಬೃಹತ್ ಪ್ರಮಾಣದ ಭ್ರಷ್ಟಾಚಾರ ನಡೆದಿದ್ದು, ಕೃಷಿ ಸಚಿವ ಬಿ.ಸಿ. ಪಾಟೀಲ ₹ 210 ಕೋಟಿ ಮೊತ್ತದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಆ್ಯಂಟಿ ಕರಪ್ಷನ್ ಫೋರ್ಸ್ (ಎಸಿಎಫ್) ಕರ್ನಾಟಕ ಸಂಘಟನೆಯ ಅಧ್ಯಕ್ಷ ಎನ್. ಕೃಷ್ಣಮೂರ್ತಿ, ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದ್ದಾರೆ.
‘ತುಂತುರು ನೀರಾವರಿಗೆ ಬಳಸುವ ಸ್ಪ್ರಿಂಕ್ಲರ್, ಡೀಸೆಲ್ ಪಂಪ್ಸೆಟ್, ಪವರ್ ಸ್ಪ್ರೇಯರ್, ಬ್ಯಾಟರಿ ಚಾಲಿತ ಬ್ಯಾಕ್ ಸ್ಪ್ರೇಯರ್ ಸೇರಿದಂತೆ ಸಹಾಯಧನ ಯೋಜನೆಗಳ ಅಡಿಯಲ್ಲಿ ವಿತರಿಸಲು ಯಂತ್ರೋಪಕರಣ ಖರೀದಿಯಲ್ಲಿ ದೊಡ್ಡ ಪ್ರಮಾಣದ ಅವ್ಯವಹಾರ ನಡೆದಿದೆ. ಯಂತ್ರೋಪಕರಣಗಳನ್ನು ಖರೀದಿ ಮಾಡದೆ ನಕಲಿ ಬಿಲ್ ಸೃಷ್ಟಿಸಿ ಹಣ ಲೂಟಿ ಮಾಡಲಾಗಿದೆ. ಪ್ರಭಾವಿ ನಾಯಕರು ಬೇನಾಮಿ ಹೆಸರಿನಲ್ಲಿ ಹೊಂದಿರುವ ಕಂಪನಿಗಳಿಂದ ಯಂತ್ರೋಪಕರಣ ಖರೀದಿಸಿ, ಅಕ್ರಮ ಎಸಗಲಾಗಿದೆ’ ಎಂದು ಎಸಿಬಿ ಬೆಂಗಳೂರು ನಗರ ಘಟಕದ ಎಸ್ಪಿಗೆ ಮಂಗಳವಾರ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಿದ್ದಾರೆ.
‘ಕೃಷಿ ಇಲಾಖೆಯ ಹೆಚ್ಚುವರಿ ನಿರ್ದೇಶಕ ದಿವಾಕರ್ ಮತ್ತು ಸಚಿವರು ಸೇರಿಕೊಂಡು ಅಕ್ರಮ ಎಸಗಿದ್ದಾರೆ. ದಿವಾಕರ್ ಕೂಡ ಬೇನಾಮಿ ಕಂಪನಿ ಹೊಂದಿರುವ ಆರೋಪವಿದೆ. ಟೆಂಡರ್ನಲ್ಲಿ ಭಾಗವಹಿಸಿದ್ದ ಕಂಪನಿ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಿದ ಈ ಅಧಿಕಾರಿ, ಬೃಹತ್ ಮೊತ್ತದ ಭ್ರಷ್ಟಾಚಾರ ನಡೆಸಿದ್ದಾರೆ. ಶೇಕಡ 50ರಷ್ಟು ಯಂತ್ರೋಪಕರಣಗಳು ಪೂರೈಕೆ ಆಗಿಲ್ಲ. ಆದರೂ, ಬಿಲ್ ಪಾವತಿಸಿ ಬೃಹತ್ ಪ್ರಮಾಣದ ಲಂಚ ಪಡೆಯಲಾಗಿದೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ತಮ್ಮ ದೂರಿನಲ್ಲಿ ಆರೋಪಗಳ ಕುರಿತು ಸಚಿವ ಬಿ.ಸಿ. ಪಾಟೀಲ ಮತ್ತು ಕೃಷಿ ಇಲಾಖೆ ಹೆಚ್ಚುವರಿ ನಿರ್ದೇಶಕ ದಿವಾಕರ್ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಪಾಟೀಲ ಅವರು ಕೃಷಿ ಸಚಿವರಾದ ಬಳಿಕ ನಡೆದಿರುವ ಯಂತ್ರೋಪಕರಣ ಖರೀದಿ ಕುರಿತು ಸಮಗ್ರವಾಗಿ ತನಿಖೆ ನಡೆಸಬೇಕು. ಈ ಅವಧಿಯಲ್ಲಿ ಯಂತ್ರೋಪಕರಣ ಪೂರೈಕೆಗೆ ಗುತ್ತಿಗೆ ಪಡೆದಿರುವ ಕಂಪನಿಗಳ ಬಗ್ಗೆ ಸಂಪೂರ್ಣ ಪರಿಶೀಲನೆ ನಡೆಸಬೇಕು. ಈ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲ ಕಡತಗಳನ್ನೂ ವಶಕ್ಕೆ ಪಡೆಯಬೇಕು ಎಂದು ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ.
ಭ್ರಷ್ಟಾಚಾರದ ಆರೋಪ ಮತ್ತು ಎಸಿಬಿಗೆ ನೀಡಿರುವ ದೂರಿನ ಕುರಿತು ಬಿ.ಸಿ. ಪಾಟೀಲ ಅವರ ಪ್ರತಿಕ್ರಿಯೆ ಪಡೆಯಲು ಹಲವು ಬಾರಿ ಪ್ರಯತ್ನಿಸಲಾಯಿತು. ಆದರೆ, ಅವರು ಸಂಪರ್ಕಕ್ಕೆ ಲಭ್ಯರಾಗಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.