ಬೆಂಗಳೂರು: ‘ಕಾಂಗ್ರೆಸ್ ನಾಯಕರು ಹಟ ತೊರೆದು, ಕೋವಿಡ್ ಸೋಂಕು ನಿಯಂತ್ರಣ ಕಾರ್ಯದಲ್ಲಿ ಸರ್ಕಾರದ ಜೊತೆಗೆ ಕೈಜೋಡಿಸಬೇಕು. ಯಾರೇ ನಿರ್ಬಂಧ ಉಲ್ಲಂಘಿಸಿದವರೂ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ‘ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು ತಡೆಯಲು ವಿಧಿಸಿದ ನಿರ್ಬಂಧಗಳನ್ನು ಉಲ್ಲಂಘಿಸಿದವರ ವಿರುದ್ಧ ಪ್ರಕೃತಿ ವಿಕೋಪ ತಡೆ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲೇಬೇಕಾಗುತ್ತದೆ’ ಎಂದರು.
‘ಕೋವಿಡ್ ಸಾಂಕ್ರಾಮಿಕ ಉಲ್ಬಣ ವಾಗುತ್ತಿರುವ ಈ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ತೆಗೆದುಕೊಂಡ ನಿರ್ಬಂಧಗಳನ್ನು ಎಲ್ಲರೂ ಪಾಲಿಸಿ, ಸಹಕರಿಸಬೇಕು’ ಎಂದು ಹೇಳಿದರು.
‘ಮೇಕೆದಾಟು ಯೋಜನೆಗೆ ಸಂಬಧಿಸಿದ ವ್ಯಾಜ್ಯ ಸುಪ್ರಿಂಕೋರ್ಟ್ನಲ್ಲಿದೆ. ಕಾಂಗ್ರೆಸ್ಸಿನವರು ಸರ್ಕಾರ ನಡೆಸಿದವರು. ಅವರು ಜವಾಬ್ದಾರಿಯಿಂದ ವರ್ತಿಸಬೇಕು' ಎಂದರು.
‘ಅನಾರೋಗ್ಯ ಬಂದ ಬಳಿಕ ಸಮಸ್ಯೆ ಎದುರಿಸುವುದಕ್ಕಿಂತ ಬಾರದಂತೆ ತಡೆಯುವುದು ಅತ್ಯುತ್ತಮ ಪ್ರಯತ್ನ’ ಎಂದ ಸಚಿವರು, ‘ಕಾಂಗ್ರೆಸ್ ಪಾದಯಾತ್ರೆ ರಾಜಕೀಯ ಪ್ರೇರಿತ’ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ‘ವಾರಾಂತ್ಯ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿ ವೇಳೆ ಪೊಲೀಸರು ಅತ್ಯಂತ ಸಹನೆಯಿಂದ ವರ್ತಿಸಬೇಕು. ಸಾರ್ವಜನಿಕರೂ ಸಹಕರಿಸಬೇಕು' ಎಂದು ಮನವಿ ಮಾಡಿದರು.