ತೋಟಗಾರಿಕಾ ಸಚಿವ ಮುನಿರತ್ನ, ಅಡಿಕೆ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್. ಅಂಗಾರ ನೇತೃತ್ವದಲ್ಲಿ ಸೆಪ್ಟೆಂಬರ್ 16ರಂದು ನಡೆದ ಸಭೆಯಲ್ಲಿ ಅಡಿಕೆ ಬೆಳೆಗಾರರಿಗೆ ಔಷಧಿ ಸಿಂಪಡಣೆಗೆ ಸಹಾಯಧನ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಒಟ್ಟು ₹ 8 ಕೋಟಿ ಅನುದಾನ ಬಿಡುಗಡೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. 10,000 ಹೆಕ್ಟೇರ್ ವಿಸ್ತೀರ್ಣದ ಅಡಿಕೆ ತೋಟಗಳಿಗೆ ಮೊದಲ ಹಂತದ ಔಷಧಿ ಸಿಂಪಡಣೆಗಾಗಿ ₹ 4 ಕೋಟಿ ಬಿಡುಗಡೆ ಮಾಡಲಾಗಿದೆ.