ಬೆಂಗಳೂರು: ‘ಆರೋಗ್ಯ ಸೇತು ಆ್ಯಪ್ ಬಳಕೆ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಯಾವುದೇ ನಾಗರಿಕನಿಗೆ ಸರ್ಕಾರದ ಸೌಲಭ್ಯವನ್ನು ನಿರಾಕರಿಸುವಂತಿಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದ ಆದೇಶ ಹೊರಡಿಸಿದೆ.
ಆಕ್ಷೇಪ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಕೊನೆಯ ಅವಕಾಶ ನೀಡಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಡಿಜಿಟಲ್ ಹಕ್ಕು ಹೋರಾಟಗಾರ ಅನಿವರ್ ಎ.ಅರವಿಂದ್, ‘ಯಾವುದೇ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸುವುದು ಖಾಸಗಿ ಹಕ್ಕು ಮತ್ತು ಇತರ ಮೂಲಭೂತ ಹಕ್ಕುಗಳ ಉಲ್ಲಂಘನೆ’ ಎಂದು ತಿಳಿಸಿದ್ದರು.
‘ಯಾವುದೇ ಸೇವೆ ಪಡೆಯಲು ಈ ಆ್ಯಪ್ ಬಳಕೆ ಕಡ್ಡಾಯವಲ್ಲ ಎಂದು ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸ್ಪಷ್ಟಪಡಿಸಿದೆ’ ಎಂದು ಕೇಂದ್ರ ಸರ್ಕಾರದ ಪರ ವಕೀಲರು ತಿಳಿಸಿದರು.
‘ಆದರೂ, ಆ್ಯಪ್ ಬಳಕೆ ಕಡ್ಡಾಯಗೊಳಿಸಿ ಹಲವು ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಉದ್ಯೋಗಿಗಳುಆರೋಗ್ಯ ಸೇತು ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಿಸಿಬ್ಬಂದಿ ಮತ್ತು ತರಬೇತಿ ಇಲಾಖೆ(ಡಿಒಪಿಟಿ) ಸುತ್ತೋಲೆ ಹೊರಡಿಸಿದೆ’ ಎಂದು ಅರ್ಜಿದಾರರು ಉದಾಹರಿಸಿದರು.