ಈ ಸಂಬಂಧ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಿಗೆ ಪತ್ರ ಬರೆದಿದೆ. ಸಾಂಕ್ರಾಮಿಕವಲ್ಲದ ರೋಗಗಳ ಸಮೀಕ್ಷೆ, 0–18 ವರ್ಷದ ಮಕ್ಕಳ ಮನೆ ಮನೆ ಸಮೀಕ್ಷೆ ಸೇರಿದಂತೆ ವಿವಿಧ ಸಮೀಕ್ಷೆಗಳಿಗೆ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಈ ಸಮೀಕ್ಷೆಗಳನ್ನು ಮೊಬೈಲ್ ಆ್ಯಪ್ಗಳ ನೆರವಿನಿಂದ ನಡೆಸಲು ಸೂಚಿಸಿ, ತರಬೇತಿ ನೀಡಲಾಗುತ್ತಿದೆ. ಎಲ್ಲ ಆಶಾ ಕಾರ್ಯಕರ್ತೆಯರ ಬಳಿ ಸ್ಮಾರ್ಟ್ ಫೋನ್ಗಳು ಇರುವುದಿಲ್ಲ. ಹಲವರಿಗೆ ಸ್ಮಾರ್ಟ್ ಫೋನ್ಗಳ ನಿರ್ವಹಣೆ ತಿಳಿದಿಲ್ಲ. ಕೋವಿಡ್ನಿಂದಾಗಿ ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಹೊಸ ಮೊಬೈಲ್ಗಳನ್ನು ಖರೀದಿಸಲು ಸಾಧ್ಯವಿಲ್ಲ. ಹಾಗಾಗಿ, ಸಮೀಕ್ಷೆಗಳನ್ನು ಮಾಡದಿರಲು ನಿರ್ಧರಿಸಿದ್ದೇವೆ ಎಂದು ಸಂಘದ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ.