ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಡೇರದ ಬೇಡಿಕೆ: ಹೋರಾಟದ ಎಚ್ಚರಿಕೆ ಕೊಟ್ಟ ‘ಆಶಾ’

₹ 12 ಸಾವಿರಕ್ಕೆ ವೇತನ ಹೆಚ್ಚಿಸಲು ಆಗ್ರಹ
Last Updated 18 ಸೆಪ್ಟೆಂಬರ್ 2020, 18:55 IST
ಅಕ್ಷರ ಗಾತ್ರ

ಬೆಂಗಳೂರು: ಮಾಸಿಕ ವೇತನ ₹ 12 ಸಾವಿರಕ್ಕೆ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸದ ಕಾರಣ ವಿಧಾನಮಂಡಲದ ಅಧಿವೇಶನದ ಸಂದರ್ಭದಲ್ಲಿ ಹೋರಾಟಕ್ಕೆ ಇಳಿಯುವುದಾಗಿ ಆಶಾ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳಲ್ಲಿ ಸರ್ಕಾರ 42 ಸಾವಿರ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳುತ್ತಿದೆ.ಸದ್ಯ ಅವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಮಾಸಿಕ ₹ 6 ಸಾವಿರ ವೇತನ ನೀಡಲಾಗುತ್ತಿದೆ. ಈ ಮೊತ್ತವನ್ನು ₹ 12 ಸಾವಿರಕ್ಕೆ ಏರಿಕೆ ಮಾಡಬೇಕು ಎನ್ನುವುದು ಅವರ ಪ್ರಮುಖ ಬೇಡಿಕೆಯಾಗಿದೆ. ಅದೇ ರೀತಿ, ಅಪಾಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತಮಗೆ ಮುಖಗವಸು ಸೇರಿದಂತೆ ವೈಯಕ್ತಿಕ ಸುರಕ್ಷಾ ಸಾಧನಗಳನ್ನು ಒದಗಿಸಬೇಕೆಂದು ಆಗ್ರಹಿಸಿ, ಜುಲೈ ತಿಂಗಳಲ್ಲಿ ಅವರು ನಿರಂತರ 20 ದಿನಗಳು ಮುಷ್ಕರ ನಡೆಸಿದ್ದರು. ಆ ವೇಳೆ ಅವರ ಜತೆ ಮಾತುಕತೆ ನಡೆಸಿದ್ದ ಆರೋಗ್ಯ ಸಚಿವ ಬಿ. ಶ್ರೀರಾಮುಲು, ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು.

‘ಮುಷ್ಕರ ಕೈಬಿಟ್ಟುಒಂದೂವರೆ ತಿಂಗಳಾದರೂ ಸರ್ಕಾರ ಬೇಡಿಕೆಗಳನ್ನು ಈಡೇರಿಸಲಿಲ್ಲ. ನಮ್ಮ ಸಮಸ್ಯೆಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ಕೂಡ ಬಂದಿದ್ದವು. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆಯನ್ನು ಸರ್ಕಾರ ಹೊರಡಿಸಿಲ್ಲ. ಈಗ ಮತ್ತೊಮ್ಮೆ ಹೋರಾಟಕ್ಕೆ ಇಳಿಯುವುದು ಅನಿವಾರ್ಯ. ಅಲಕ್ಷ್ಯ ಧೋರಣೆ ತಾಳಿರುವ ಸರ್ಕಾರದ ವಿರುದ್ಧ ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾಗಿ ಹೋರಾಟ ನಡೆಸುತ್ತೇವೆ’ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕರ್ನಾಟಕ ರಾಜ್ಯ ಸಮಿತಿಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ.

‘ವೇತನ ಹೆಚ್ಚಳದ ಜತೆಗೆ ಕಾಲಕಾಲಕ್ಕೆ ಎಲ್ಲ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ನಡೆಸಬೇಕು. ಕೊರೊನಾ ಸೋಂಕು ದೃಢಪಟ್ಟಲ್ಲಿ ಉಚಿತವಾಗಿ ಚಿಕಿತ್ಸೆ ಒದಗಿಸಿ, ಆಸ್ಪತ್ರೆಯಲ್ಲಿದ್ದ ಅವಧಿಯಲ್ಲಿಯೂ ಗೌರವಧನ ನೀಡಬೇಕು. ಈಗಾಗಲೇ ಘೋಷಿಸಿರುವ ₹ 3 ಸಾವಿರ ಕೋವಿಡ್‌ ಪ್ರೋತ್ಸಾಹ ಧನವನ್ನು ಪಾವತಿಸಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT