ಬೆಂಗಳೂರು: ‘ಈ–ಸಮೀಕ್ಷೆ ಮಾಡಲು ಸೂಕ್ತ ಸಂಭಾವನೆ ನೀಡಬೇಕು’ ಎಂದು ಒತ್ತಾಯಿಸಿ ಬಿಬಿಎಂಪಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೇರಿದ್ದ ಪ್ರತಿಭಟನಕಾರರು, ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
‘ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು ನಿತ್ಯವೂ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ–ಸಮೀಕ್ಷೆ ಮಾಡಲು ಬೇಕಾದ ಮೊಬೈಲ್, ಟ್ಯಾಬ್ ಹಾಗೂ ಇಂಟರ್ನೆಟ್ ವ್ಯವಸ್ಥೆಯೂ ಇಲ್ಲ’ ಎಂದು ದೂರಿದರು.
‘ಕೊರೊನಾ ಸೋಂಕಿನ ವಿರುದ್ಧ ವಿಶ್ರಾಂತಿ ಇಲ್ಲದೇ ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಇದೀಗ ಅವರನ್ನೇ ಈ–ಸಮೀಕ್ಷೆಗೂ ಬಳಸಿಕೊಳ್ಳಲಾಗುತ್ತಿದೆ. ಈ–ಸಮೀಕ್ಷೆ ಮಾಡಲು ಕನಿಷ್ಠ ಸಂಭಾವನೆಯನ್ನೂ ನಿಗದಿ ಮಾಡಿಲ್ಲ’ ಎಂದರು.
ಮನವಿ ಸ್ವೀಕಾರ; ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ರಾಜ್ಯ ನೋಡಲ್ ಅಧಿಕಾರಿ ಪ್ರಭುಗೌಡ, ಪ್ರತಿಭಟನಕಾರರಿಂದ ಮನವಿ ಪತ್ರ ಸ್ವೀಕರಿಸಿದರು.