ಬೆಂಗಳೂರು: ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರಿ ಜಮೀನುಗಳನ್ನು ಗುರುತಿಸಿ, ಒದಗಿಸುವಂತೆ ಕಂದಾಯ ಸಚಿವ ಆರ್. ಅಶೋಕ, ಎಲ್ಲ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಆದೇಶಿಸಿದ್ದಾರೆ.
ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕೋವಿಡ್ನಿಂದ ಸಂಭವಿಸುತ್ತಿರುವ ಸಾವುಗಳ ಸಂಖ್ಯೆ ಹೆಚ್ಚುತ್ತಿದೆ. ಮೃತರ ಅಂತ್ಯಸಂಸ್ಕಾರಕ್ಕೆ ಜಮೀನು ಲಭ್ಯವಾಗುತ್ತಿಲ್ಲ ಎಂಬ ಅಂಶ ಗಮನಕ್ಕೆ ಬಂದಿದೆ. ಬಿಬಿಎಂಪಿ ಸೇರಿದಂತೆ ಎಲ್ಲ ಮಹಾನಗರ ಪಾಲಿಕೆಗಳ ವ್ಯಾಪ್ತಿಯಿಂದ 1ರಿಂದ 2 ಕಿ.ಮೀ. ದೂರದಲ್ಲಿ ಸರ್ಕಾರಿ ಜಮೀನುಗಳನ್ನು ಗುರುತಿಸಿ, ಕೋವಿಡ್ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕಾಗಿ ಒದಗಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.