‘ಬೆಂಗಳೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದ ವಿವಾದವನ್ನು ಮಾತುಕತೆ ಮೂಲಕ ಪರಿಹರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಮಾತುಕತೆಯ ಮೂಲಕವೇ ವಿವಾದ ಪರಿಹರಿಸಿಕೊಳ್ಳುವುದು ಉತ್ತಮ. ಇದಕ್ಕಾಗಿ ಎರಡೂ ಕಡೆಯವರು ಕುಳಿತು ಚರ್ಚಿಸಿ, ಒಮ್ಮತಕ್ಕೆ ಬರಬೇಕಿದೆ’ ಎಂದರು.
‘ಎರಡೂ ರಾಜ್ಯಗಳ ನಡುವೆ ಮಾತುಕತೆ ನಡೆಸಲು ನಾವು ಪ್ರಯತ್ನಿಸುತ್ತಿದ್ದೇವೆ. ಈ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆದರೆ, ಯಾವ ದಿನ ನಡೆಯಲಿದೆ ಎಂಬುದನ್ನು ಹೇಳುವುದು ಕಷ್ಟ. ಎರಡೂ ರಾಜ್ಯಗಳು ಸಹಮತಕ್ಕೆ ಬಂದರೆ ಮಾತ್ರವೇ ಮಾತುಕತೆ ನಡೆಯಲು ಸಾಧ್ಯ’ ಎಂದು ಹೇಳಿದರು.
ಮೇಕೆದಾಟು ಯೋಜನೆ ತ್ವರಿತವಾಗಿ ಅನುಷ್ಠಾನಕ್ಕೆ ಬರಬೇಕು ಎಂಬುದು ತಮ್ಮ ಬಯಕೆ ಕೂಡ. ಆದರೆ, ಈ ವಿಚಾರ ನ್ಯಾಯಾಲಯದಲ್ಲಿದೆ. ಹೀಗಾಗಿ ಹೆಚ್ಚು ಮಾತನಾಡುವುದು ಸರಿಯಲ್ಲ ಎಂದರು.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ನಡೆಸಿದ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ 55 ವರ್ಷಗಳ ಕಾಲ ಈ ದೇಶದಲ್ಲಿ ಅಧಿಕಾರ ನಡೆಸಿದೆ. ಆಗ ಕಾಂಗ್ರೆಸ್ ಪಕ್ಷದವರು ಸರಿಯಾಗಿ ಕೆಲಸ ಮಾಡಿದ್ದರೆ ಈಗ ಇಂತಹ ಸಮಸ್ಯೆಗಳೇ ಇರುತ್ತಿರಲಿಲ್ಲ’ ಎಂದರು.