ಸ್ನಾತಕೋತ್ತರ ಆಯುರ್ವೇದ: ವಿದ್ಯಾರ್ಥಿಗಳು ನಿರಾಳ

ಬೆಂಗಳೂರು: ಪ್ರವೇಶ ಪರೀಕ್ಷೆಗಳಿಗೆ ಹಾಜರಾಗದೆ ಪ್ರವೇಶ ಪಡೆದ 2017-18 ಸಾಲಿನ ಸ್ನಾತಕೋತ್ತರ ಆಯುರ್ವೇದ ವಿದ್ಯಾರ್ಥಿಗಳು ತಮ್ಮ ಕೋರ್ಸ್ ಮುಂದುವರಿಸಬಹುದು ಎಂದು ಹೈಕೋರ್ಟ್ ಹೇಳಿದೆ.
ಡಾ. ಸೊಂಟಕ್ಕೆ ಕಾಂಚನ ರಾಮರಾವ್ ಮತ್ತು ಇತರ ಮೂವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ನೇತೃತ್ವದ ವಿಭಾಗೀಯಪೀಠ, ಈ ಆದೇಶ ನೀಡಿತು.
‘ಪರೀಕ್ಷೆ ಮೂಲಕವೇ ಕೋರ್ಸ್ಗೆ ಪ್ರವೇಶ ಪಡೆಯಬೇಕು. ಆದರೆ, 2019ರ ಅಕ್ಟೋಬರ್ 31ಕ್ಕೂ ಮೊದಲು ಸ್ನಾತಕೋತ್ತರ ಕೋರ್ಸ್ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಒಂದು ಬಾರಿಯ ಅವಕಾಶ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಇದನ್ನು ಈ ವಿದ್ಯಾರ್ಥಿಗಳಿಗೂ ಅನ್ವಯಿಸಬಹುದು’ ಎಂದು ಪೀಠ ಹೇಳಿತು.
‘ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ನಿರ್ದಿಷ್ಟ ಪ್ರಕರಣಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತ. ಅದನ್ನು ಈ ಅರ್ಜಿದಾರರಿಗೆ ವಿಸ್ತರಿಸಲು ಆಗುವುದಿಲ್ಲ’ ಎಂದು ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸಿನ್ ಪರ ವಕೀಲರು ವಾದಿಸಿದರು.
‘2019ಕ್ಕಿಂತ ಮೊದಲು ಪ್ರವೇಶ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೂ ಸುಪ್ರೀಂ ಕೋರ್ಟ್ ಆದೇಶ ಅನ್ವಯವಾಗುತ್ತದೆ. ಅರ್ಜಿದಾರರು ತಮ್ಮ ಕೋರ್ಸ್ಗಳು ಮುಂದುವರಿಸಲು ಅವಕಾಶ ನೀಡಬೇಕು. ಈಗಾಗಲೇ ಪೂರ್ಣಗೊಳಿಸಿದ್ದರೆ ಅವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಬೇಕು’ ಎಂದು ಪೀಠ ನಿರ್ದೇಶನ ನೀಡಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.