ಬೆಂಗಳೂರು: ರಾಜ್ಯದಲ್ಲಿ ರಸಗೊಬ್ಬರ, ಕೀಟನಾಶಕ ಮತ್ತು ಇತರ ಕೃಷಿ ಪರಿಕರಗಳಲ್ಲಿ ಕಳಪೆ ಉತ್ಪನ್ನಗಳು ಪೂರೈಕೆಯಾಗದಂತೆ ನಿಗಾ ವಹಿಸಬೇಕು. ಕಳಪೆ ಗುಣಮಟ್ಟದ ಉತ್ಪನ್ನಗಳ ಪತ್ತೆಗೆ ನಿರಂತರ ಕಾರ್ಯಾಚರಣೆ ನಡೆಸಬೇಕು ಎಂದು ಕೃಷಿ ಇಲಾಖೆಯ ವಿಚಕ್ಷಣಾ ದಳಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ ಸೂಚನೆ ನೀಡಿದರು.
ವಿಚಕ್ಷಣಾ ದಳದ ಸದಸ್ಯರ ಜತೆ ಬುಧವಾರ ಸಭೆ ನಡೆಸಿದ ಅವರು, ‘ರೈತರಿಗೆ ಮೋಸ ಮಾಡುವ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ ಜರುಗಿಸಬೇಕು. ಕಳಪೆ ಗುಣಮಟ್ಟದ ಕೃಷಿ ಪರಿಕರಗಳ ತಯಾರಿಕೆ ಮತ್ತು ಪೂರೈಕೆ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.
ಎಲ್ಲ ಹಂತದಲ್ಲೂ ನಿರಂತರ ಕಾರ್ಯಾಚರಣೆ ನಡೆಸಬೇಕು. ಜಿಲ್ಲಾಮಟ್ಟದ ವಿಚಕ್ಷಣ ಅಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸುತ್ತಿರಬೇಕು. ಅಕ್ರಮಗಳು ಪತ್ತೆಯಾದ ಪ್ರಕರಣಗಳಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೂ ನೋಟಿಸ್ ಜಾರಿಗೊಳಿಸಬೇಕು ಎಂದರು.
ಕೃಷಿ ಇಲಾಖೆಯ ಶುಲ್ಕರಹಿತ ಸಹಾಯವಾಣಿ ದೂರವಾಣಿ ಸಂಖ್ಯೆಯೊಂದಿಗೆ ಜಾಗೃತ ಕೋಶಕ್ಕೂ ಸಂಪರ್ಕ ಕಲ್ಪಿಸಬೇಕು. ಜಪ್ತಿ ಮಾಡಿದ ಕೃಷಿ ಪರಿಕರಗಳ ವಿಲೇವಾರಿಗೆ ಮಾರ್ಗಸೂಚಿ ಹೊರಡಿಸಬೇಕು. ಕೃಷಿ ಪರಿಕರಗಳ ಗುಣಮಟ್ಟ ನಿಯಂತ್ರಣಕ್ಕೆ ಪೂರಕವಾಗಿ ತಂತ್ರಾಂಶಗಳನ್ನು ರೂಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.