ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಬ್ಬಾಳ ಕ್ಷೇತ್ರದಲ್ಲಿ ಸ್ಪರ್ಧಿಸಿ: ಸಿದ್ದರಾಮಯ್ಯಗೆ ಬೈರತಿ ಸುರೇಶ್ ಆಹ್ವಾನ

Last Updated 8 ಡಿಸೆಂಬರ್ 2021, 20:51 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೆಬ್ಬಾಳ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು. ಅವರಿಗೆ ಶಕ್ತಿ ತುಂಬುವ ಹೊಣೆ ನಮ್ಮದು’ ಎಂದು ಹೆಬ್ಬಾಳ ಶಾಸಕ ಬೈರತಿ ಸುರೇಶ್‌ ಆಹ್ವಾನ ನೀಡಿದ್ದಾರೆ.

‘ಸಿದ್ದರಾಮಯ್ಯ ಒಂದು ಕ್ಷೇತ್ರಕ್ಕೆ ಸೀಮಿತವಾದ ನಾಯಕರಲ್ಲ. ಹೆಬ್ಬಾಳ ಸೇರಿದಂತೆ ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಗೆದ್ದು ಬರುವ ವರ್ಚಸ್ಸು ಹಾಗೂ ಕಾರ್ಯಕರ್ತ ಪಡೆ ಹೊಂದಿರುವ ನಾಯಕ ಅವರು. ಸಿದ್ದರಾಮಯ್ಯ ಬಗ್ಗೆ ಕೀಳು ಹೇಳಿಕೆ ನೀಡುವವರಿಗೆ ತಲೆ ಕೆಟ್ಟಿರಬೇಕು’ ಎಂದು ಅವರು ಹರಿಹಾಯ್ದಿದ್ದಾರೆ.

ಬಿ.ಬಿ. ಚಿಮ್ಮನಕಟ್ಟಿ ನೀಡಿರುವ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ‘ಚಿಮ್ಮನಕಟ್ಟಿ ಅವರು ರಾಜಕಾರಣದಲ್ಲಿ ಚಲಾವಣೆ ಕಳೆದುಕೊಂಡ ನಾಣ್ಯ. ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಅವರು ಸಿದ್ದರಾಮಯ್ಯ ವಿರುದ್ಧ ಕೀಳು ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ’ ಎಂದಿದ್ದಾರೆ.

‘ಸಿದ್ದರಾಮಯ್ಯ ಅವರನ್ನೇ ನಂಬಿರುವ ದೊಡ್ಡ ಸಂಖ್ಯೆಯ ಸಮುದಾಯಗಳು ರಾಜ್ಯದೆಲ್ಲೆಡೆ ಇವೆ. ಇಂತಹ ಸಮುದಾಯಗಳ ಒಳಿತಿಗೆ, ಅಭಿವೃದ್ಧಿಗೆ ಸಿದ್ದರಾಮಯ್ಯ ಅವರ ಸಮರ್ಥ ನಾಯಕತ್ವದ ಅಗತ್ಯವಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಲ ನೀಡಲು ಸಿದ್ದರಾಮಯ್ಯ ರಾಜ್ಯದಾದ್ಯಂತ ಸಂಚರಿಸಿ ಪ್ರಚಾರ ನಡೆಸುವ ಅಗತ್ಯವೂ ಇದೆ. ಹೀಗಾಗಿ ಹೆಬ್ಬಾಳದಿಂದ ಸ್ಪರ್ಧಿಸಬೇಕು’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT