ಬಾಗಲಕೋಟೆ: ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್ 5ರಂದು ಬಂದ್ ಆಚರಿಸಲಾಗುತ್ತಿದೆ. ಅದಕ್ಕೆ ಬೆಂಬಲ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಎಚ್.ಶಿವರಾಮೇಗೌಡ ಬಣದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಪಾಟೀಲ ಮನವಿ ಮಾಡಿದರು
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಕರ್ನಾಟಕ ಬಂದ್ ಹೋರಾಟಕ್ಕೆ ನಮ್ಮ ಸಂಘಟನೆ ಬೆಂಬಲ ನೀಡುತ್ತಿದೆ ಎಂದರು.
ಕರ್ನಾಟಕದಲ್ಲಿ ನೆಲೆಸಿ ಇದೇ ನಾಡಿನವರೇ ಆಗಿರುವ ಮರಾಠಿಗರ ಆಭಿವೃದ್ದಿಗೆ ಸರ್ಕಾರ ₹50 ಕೋಟಿಯಲ್ಲ. ಅದಕ್ಕಿಂತ ಹೆಚ್ಚು ಅನುದಾನ ಮೀಸಲಿಡಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಮರಾಠಿಗರ ಹೆಸರಿನಲ್ಲಿ ಎಂಇಎಸ್ ಸಂಘಟನೆ ಲಾಭ ಪಡೆಯುವುದನ್ನು ಸಹಿಸುವುದಿಲ್ಲ ಎಂದರು.
ಕರ್ನಾಟಕ ರಾಜ್ಯೋತ್ಸವದ ವೇಳೆ ಕರಾಳ ದಿನ ಆಚರಿಸುವ ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಬಿಜೆಪಿ-ಕಾಂಗ್ರೆಸ್ ನ ಯಾವೊಬ್ಬ ಜನಪ್ರತಿನಿಧಿಯೂ ಧ್ವನಿ ಎತ್ತುವುದಿಲ್ಲ. ರಾಜ್ಯ ಸರ್ಕಾರ ಇದೇ ಧೋರಣೆ ಮುಂದುವರೆಸಿದಲ್ಲಿ ಬೆಳಗಾವಿಯಲ್ಲಿ ಕನ್ನಡಿಗರಿಗೆ ಸಂಕಷ್ಟ ಹೆಚ್ಚಲಿದೆ ಎಂದರು.
ಬೆಳಗಾವಿ ಲೋಕಸಭೆ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇದು ಬಿಜೆಪಿ ಸರ್ಕಾರದಿಂದ ಕನ್ನಡಿಗರನ್ನೇ ಒಡೆದು ಆಳುವ ನೀತಿಯಾಗಿದೆ ಎಂದು ಆರೋಪಿಸಿದರು.
ಅಂದು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರೆಗೂ ಶಾಂತಿಯುತವಾಗಿ ಬಂದ್ ಆಚರಿಸಲಾಗುವುದು.ಹೊರಗಿನಿಂದ ಬರುವ ಕಿಡಿಗೇಡಿಗಳು ಕರ್ನಾಟಕ ರಕ್ಷಣಾ ವೇದಿಕೆ ಹೆಸರಿನಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡದಂತೆ ನೋಡಿಕೊಳ್ಳಲು ಪೊಲೀಸರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.