ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ; ಆರೋಪಿಗೆ ಗುಂಡೇಟು

Last Updated 12 ಅಕ್ಟೋಬರ್ 2020, 10:42 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ರೈಲು ನಿಲ್ದಾಣದಲ್ಲಿ ಮಲಗಿದ್ದ 4 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿ ದಿನೇಶ್ (32) ಎಂಬಾತನನ್ನು ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

‘ಬಾಲಕಿ ಅಪಹರಣ ಹಾಗೂ ಅತ್ಯಾಚಾರ ಸಂಬಂಧ ಆಕೆಯ ತಾಯಿ ಶ್ರೀರಾಮಪುರ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಇನ್‌ಸ್ಪೆಕ್ಟರ್ ಸುನೀಲ್ ನಾಯ್ಕ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ. ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರಕುಮಾರ್ ಮೀನಾ ಹೇಳಿದರು.

‘ಬಾಲಕಿಯ ತಂದೆ, ತಮಿಳುನಾಡಿನವರು. ಪತ್ನಿ ಹಾಗೂ ಮಕ್ಕಳ ಜೊತೆ ಸೇರಿ ನಗರದಲ್ಲಿ ಮಕ್ಕಳ ಆಟಿಕೆ ಸಾಮಗ್ರಿ ಮಾರಾಟ ಮಾಡಿ ಜೀವನ ನಡೆಸುತ್ತಿದ್ದಾರೆ. ಇದೇ 10ರಂದು ರೈಲ್ವೆ ನಿಲ್ದಾಣದಲ್ಲಿ ಸಾಮಗ್ರಿ ಮಾರಾಟ ಮಾಡಿದ್ದ ಕುಟುಂಬ, ರಾತ್ರಿಟಿಕೆಟ್ ಕೌಂಟರ್‌ ಬಳಿ ಮಲಗಿತ್ತು.’

‘ತಡರಾತ್ರಿ ಬಾಲಕಿ ಕಾಣಿಸಿರಲಿಲ್ಲ. ಹುಡುಕಾಟ ನಡೆಸಿದಾಗ ಬಾಲಕಿಯನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಸೇರಿಸಿದ್ದ ವಿಷಯ ಗೊತ್ತಾಗಿತ್ತು. ಆಸ್ಪತ್ರೆಗೆ ಹೋಗಿ ಪೋಷಕರು ವಿಚಾರಿಸಿದ್ದರು. ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದರು. ಬಳಿಕವೇ ಠಾಣೆಗೆ ಬಂದು ಪೋಷಕರು ದೂರು ನೀಡಿದ್ದರು’ ಎಂದೂ ತಿಳಿಸಿದರು.

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನ; ‘ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ದಿನೇಶ್, ಸೋಮವಾರ ಓಕಳಿಪುರದ ಆರ್.ಆರ್‌.ಕೆ ಜಂಕ್ಷನ್ ಬಳಿ ಕಾಣಿಸಿಕೊಂಡಿದ್ದ. ಮಾಹಿತಿ ತಿಳಿದ ಇನ್‌ಸ್ಪೆಕ್ಟರ್ ನೇತೃತ್ವದ ತಂಡ ಸ್ಥಳಕ್ಕೆ ಹೋಗಿತ್ತು. ಪೊಲೀಸರನ್ನು ಕಂಡ ಆರೋಪಿ, ಎಎಸ್‌ಐ ವೆಂಕಟಪ್ಪ ಅವರ ಮೇಲೆಯೇ ಚಾಕುವಿನಿಂದ ಹಲ್ಲೆ ಮಾಡಿದ್ದ’ ಎಂದು ಡಿಸಿಪಿ ಧರ್ಮೇಂದ್ರಕುಮಾರ್ ಹೇಳಿದರು.

‘ಗಾಳಿಗೆ ಒಂದು ಸುತ್ತು ಗುಂಡು ಹಾರಿಸಿದ್ದ ಇನ್‌ಸ್ಪೆಕ್ಟರ್ ಸುನೀಲ್ ನಾಯ್ಕ, ಶರಣಾಗುವಂತೆ ಆರೋಪಿಗೆ ಹೇಳಿದ್ದರು. ಅದಕ್ಕೆ ಒಪ್ಪದ ಆರೋಪಿ ಪುನಃ ಹಲ್ಲೆ ಮಾಡಲು ಮುಂದಾಗಿದ್ದ. ಅದೇ ವೇಳೆಯೇ ಇನ್‌ಸ್ಪೆಕ್ಟರ್, ಆತನ ಬಲಗಾಲಿಗೆ ಗುಂಡು ಹಾರಿಸಿದ್ದರು. ಸ್ಥಳದಲ್ಲೇ ಕುಸಿದುಬಿದ್ದ ಆತನನ್ನು ಪೊಲೀಸರೇ ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದೂ ತಿಳಿಸಿದರು.

‘ಹಲ್ಲೆಯಿಂದಾಗಿ ಎಎಸ್‌ಐ ವೆಂಕಟಪ್ಪ ಅವರಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದೂ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT