ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಯತ್ನಾಳ, ‘ರಾಜ್ಯದ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವುದು, ಎಸ್ಟಿ ಮೀಸಲಾತಿಯನ್ನು ಶೇ 3ರಿಂದ 7.5ಕ್ಕೆ ಹೆಚ್ಚಿಸಿ ವಾಲ್ಮೀಕಿ ಜನಾಂಗ ಹಾಗೂ ಉಪ್ಪಾರ ಸಮಾಜ ಮತ್ತು ಇನ್ನಿತರ ಎಸ್ಟಿ ಜನಾಂಗಕ್ಕೆ ಅನುಕೂಲ ಮಾಡಿಕೊಡುವುದಾಗಿ ಆರು ತಿಂಗಳ ಹಿಂದೆ ನಡೆದ ಅಧಿವೇಶನದಲ್ಲಿ ಸರ್ಕಾರ ಭರವಸೆ ನೀಡಿತ್ತು. ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2 ಎ ಸೇರಿಸಲು ಆರು ತಿಂಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಸರ್ಕಾರಕ್ಕೆ ನೀಡಿದ್ದ ಸೆಪ್ಟೆಂಬರ್ 15ರ ಗಡುವು ಮುಗಿದಿದೆ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಲೆ ಮಹದೇಶ್ವರ ಬೆಟ್ಟದಿಂದ ಐದನೇ ಹಂತದ ಚಳವಳಿ ಆರಂಭವಾಗಿದೆ’ ಎಂದರು.