ವಿಜಯಪುರ: ‘ಪಶ್ಚಿಮ ಬಂಗಾಳ ಸೇರಿದಂತೆ ಪಂಚರಾಜ್ಯಗಳ ಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಖಚಿತ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು.
ನಗರಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಉತ್ತರಾಖಂಡದಲ್ಲಿ ಯಾವ ರೀತಿ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆಯೋ ಅದೇ ರೀತಿ ಕರ್ನಾಟಕ ಹಾಗೂ ಹರಿಯಾಣ ಸಿಎಂ ಬದಲಾವಣೆ ಆಗಲಿದ್ದಾರೆ ಎಂದು ಹೇಳಿದರು.
ಭ್ರಷ್ಟಾಚಾರ, ಕುಟುಂಬ ರಾಜಕಾರಣದಲ್ಲಿ ಮುಳುಗಿರುವ ಯಡಿಯೂರಪ್ಪ ಅವರನ್ನು ಮುಂದಿಟ್ಟುಕೊಂಡು ಮುಂದಿನ ವಿಧಾನಸಭೆ ಚುನಾವಣೆಗೆ ಹೋಗಲು ಸಾಧ್ಯವಿಲ್ಲ. ದಕ್ಷಿಣ ಭಾರತದಲ್ಲಿ ಬಿಜೆಪಿಯ ಕೊನೆಯ ಮುಖ್ಯಮಂತ್ರಿ ಇವರೊಬ್ಬರೇ ಎಂದಾಗಬಾರದು. ಇನ್ನೂ ಹಲವರು ಆಗಬೇಕಾಗಿದೆ ಎಂದರು.
ಯಡಿಯೂರಪ್ಪ ಅವರಿಗೆ ಶಾಸಕಾಂಗ ಪಕ್ಷದ ಸಭೆ ಕರೆಯುವ ಇಚ್ಛೆ ಇಲ್ಲ, ಅವರ ಉದ್ದೇಶವೇ ಬೇರೆಯಾಗಿದೆ. ಅಧಿಕಾರಕ್ಕೆ ತಂದ ಬಿಜೆಪಿ ಶಾಸಕರನ್ನು ಕಡೆಗಣಿಸಿ, ಬಿಜೆಪಿಯ 38, ಕಾಂಗ್ರೆಸ್ 40 ಹಾಗೂ ಜೆಡಿಎಸ್ ಶಾಸಕರಿಗೆ ಮಾತ್ರ ಅನುದಾನ ನೀಡಿದ್ದಾರೆ ಎಂದು ಆರೋಪಿಸಿದರು.