ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗಕ್ಕೆ ಬೆಣ್ಣೆ, ವಿಜಯಪುರಕ್ಕೆ ಸುಣ್ಣ: ಶಾಸಕ ಯತ್ನಾಳ್‌ ಕಿಡಿ

‘ಶಿವಮೊಗ್ಗ ವಿಮಾನ ನಿಲ್ದಾಣ ಯೋಜನೆ: ಅಕ್ರಮದ ವಾಸನೆ’
Last Updated 17 ಮಾರ್ಚ್ 2021, 22:07 IST
ಅಕ್ಷರ ಗಾತ್ರ

ಬೆಂಗಳೂರು: ವಿಮಾನ ನಿಲ್ದಾಣ ಕಾಮಗಾರಿಗೆ ಅನುದಾನ ನೀಡುವ ವಿಷಯದಲ್ಲಿ ಶಿವಮೊಗ್ಗಕ್ಕೆ ಬೆಣ್ಣೆ ಹಾಗೂ ವಿಜಯಪುರಕ್ಕೆ ಸುಣ್ಣ ಎಂಬಂತೆ ಆಗಿದೆ ಎಂದು ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ್ ಕಿಡಿಕಾರಿದರು.

ವಿಧಾನಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಎರಡು ವಿಮಾನ ನಿಲ್ದಾಣಗಳಿಗೆ ಅನುದಾನ ಮೀಸಲಿಟ್ಟಿರುವ ಬಗ್ಗೆ ಪ್ರಶ್ನೆ ಕೇಳಿದರು. ಮೂಲಸೌಕರ್ಯ ಅಭಿವೃದ್ಧಿ ಸಚಿವ ಆನಂದ್ ಸಿಂಗ್‌, ‘ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ₹384 ಕೋಟಿ ಹಾಗೂ ವಿಜಯಪುರ ವಿಮಾನ ನಿಲ್ದಾಣ ಅಭಿವೃದ್ಧಿಗೆ ₹220 ಕೋಟಿ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ‘ ಎಂದರು.

ಆಗ ಯತ್ನಾಳ್‌, ’ವಿಜಯಪುರ ನಿಲ್ದಾಣದಲ್ಲಿ ದೊಡ್ಡ ವಿಮಾನಗಳ ಹಾರಾಟಕ್ಕೆ ಅವಕಾಶ ಇಲ್ಲ. ಕಾರ್ಗೊ ವ್ಯವಸ್ಥೆ ಇಲ್ಲ. ಜತೆಗೆ ಕಡಿಮೆ ಅನುದಾನ ಮೀಸಲಿಡಲಾಗಿದೆ. ಈ ತಾರತಮ್ಯ ಏಕೆ‘ ಎಂದು ಪ್ರಶ್ನಿಸಿದರು.

ಆನಂದ್‌ ಸಿಂಗ್, ’ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದ ಹತ್ತಿರ ಹೈಟೆನ್ಶನ್‌ ವೈರ್‌ ಇದೆ. ಅದನ್ನು ಸ್ಥಳಾಂತರ ಮಾಡುವ ಕಾಮಗಾರಿಯೂ ಇದೆ. ಹೀಗಾಗಿ, ಹೆಚ್ಚಿನ ಅನುದಾನ ಮೀಸಲಿಡಲಾಗಿದೆ‘ ಎಂದು ಸಮಜಾಯಿಷಿ ನೀಡಿದರು.

ಯತ್ನಾಳ್‌, ’ಲೋಕೋಪಯೋಗಿ ಇಲಾಖೆ ನೀಡಿರುವ ಅಂದಾಜು ವೆಚ್ಚಕ್ಕಿಂತ ಗುತ್ತಿಗೆದಾರರಿಗೆ ಶೇ 15ರಷ್ಟು ಮೊತ್ತ ಹೆಚ್ಚುವರಿ ಪಾವತಿ ಮಾಡಲಾಗುತ್ತಿದೆ. ಹೈಟೆನ್ಶನ್‌ ವೈರ್ ಸ್ಥಳಾಂತರ ಮಾಡಲು ₹10 ಕೋಟಿ ಸಾಕು. ಯೋಜನೆಯಲ್ಲಿ ಅಕ್ರಮದ ವಾಸನೆ ಕಂಡು ಬರುತ್ತಿದೆ‘ ಎಂದು ದೂರಿದರು.

ಜೆಡಿಎಸ್‌ನ ದೇವಾನಂದ ಚವ್ಹಾಣ್‌, ಕಾಂಗ್ರೆಸ್‌ನ ಶಿವಾನಂದ ಪಾಟೀಲ ಮಾತನಾಡಿ, ’ವಿಜಯಪುರದಲ್ಲಿ ತೋಟಗಾರಿಕಾ ಬೆಳೆಗಳನ್ನು ಹೆಚ್ಚು ಬೆಳೆಯಲಾಗುತ್ತಿದೆ. ಕಾರ್ಗೊ ವ್ಯವಸ್ಥೆ ಇದ್ದರೆ ಈ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುತ್ತಿತ್ತು‘ ಎಂದು ಗಮನ ಸೆಳೆದರು.

’ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಅನುದಾನ ನೀಡುವ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚನೆ ನಡೆಸುತ್ತೇನೆ‘ ಎಂದು ಆನಂದ್‌ ಸಿಂಗ್‌ ಭರವಸೆ ನೀಡಿದರು.

’ನನ್ನ ಪ್ರಶ್ನೆ ಬಂದಾಗ ಮುಖ್ಯಮಂತ್ರಿ ಸದನದಿಂದ ಹೊರಕ್ಕೆ ಹೋಗಿದ್ದು ಏಕೆ‘ ಎಂದೂ ಯತ್ನಾಳ್‌ ತಗಾದೆ ಎತ್ತಿದರು. ಅದಕ್ಕೆ ಸ್ಪಂದನೆ ಸಿಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT