ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಇಂದು ರಾಮನಗರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ. ಪಿ. ಯೋಗೇಶ್ವರ್ ಅವರ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದಿರುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.
‘ಈ ದಾಳಿಯನ್ನು ನಾನು ಕಟುವಾಗಿ ಖಂಡಿಸುತ್ತೇನೆ. ವಿಷಯಗಳು ಏನೇ ಇರಲಿ ಅದನ್ನು ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳಬೇಕು ಮತ್ತು ಯಾರು ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಟ್ವೀಟಿಸಿದ್ದಾರೆ.
ಮುಖ್ಯಮಂತ್ರಿಗಳ 50 ಕೋಟಿ ವಿಶೇಷ ಅನುದಾನದ ಅಡಿ ವಿವಿಧ ಕಾಮಗಾರಿಗೆ ಚಾಲನೆ ನೀಡಲು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಶನಿವಾರ ಬೆಳಿಗ್ಗೆ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣ ಗ್ರಾಮಕ್ಕೆ ಆಗಮಿಸಿದ್ದರು.
ಸ್ಥಳೀಯ ಶಾಸಕರಾದ ಎಚ್.ಡಿ. ಕುಮಾರಸ್ವಾಮಿ ಅವರನ್ನೇ ದೂರ ಇಟ್ಟು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಪ್ರತಿಭಟನಾಕಾರರು ಯೋಗೇಶ್ವರ್ ಕಾರಿಗೆ ಮುತ್ತಿಗೆ ಹಾಕಿದರು. ಕಲ್ಲು ಹಾಗೂ ಮೊಟ್ಟೆ ಎಸೆದರು. ನೆರೆದಿದ್ದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.
ಇಂದು ರಾಮನಗರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ. ಪಿ. ಯೋಗಿಶ್ವರ್ ಅವರ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದಿರುವುದು ಸರಿಯಲ್ಲ, ಈ ದಾಳಿಯನ್ನು ನಾನು ಕಟುವಾಗಿ ಖಂಡಿಸುತ್ತೇನೆ. ವಿಷಯಗಳು ಏನೇ ಇರಲಿ ಅದನ್ನು ಕಾನೂನಾತ್ಮಕವಾಗಿ ಬಗೆಹರೆಸಿಕೊಳ್ಳಬೇಕು ಮತ್ತು ಯಾರು ಕಾನೂನು ಕೈಗೆತ್ತಿಕೊಳ್ಳಬಾರದು.