ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ವಿಧಾನಸಭೆಚುನಾವಣೆಗೆ ಹೋಗುತ್ತೇವೆ ಎಂದು ಬಿಜೆಪಿಯ ಕರ್ನಾಟಕ ಉಸ್ತುವಾರಿ ಹಾಗೂ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶುಕ್ರವಾರ ತಿಳಿಸಿದ್ದಾರೆ
ಮುಖ್ಯಮಂತ್ರಿ ಬದಲಾವಣೆಯಂತಹ ಊಹಾಪೋಹವನ್ನು ಹರಿಬಿಡುವ ಮೂಲಕ ಕಾಂಗ್ರೆಸ್ ಗೊಂದಲವನ್ನು ಸೃಷ್ಟಿಸಿದೆ ಎಂದು ಸಿಂಗ್ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ವಿಚಾರವಾಗಿ ಮಾತನಾಡಿರುವ ಅವರು, ‘ಕರ್ನಾಟಕದಲ್ಲಿ ಮುಂದಿನ ವರ್ಷ ನಾವು ಸರ್ಕಾರ ರಚಿಸುತ್ತೇವೆ. ಮುಖ್ಯಮಂತ್ರಿ ಬದಲಾವಣೆ ಇಲ್ಲ. ಇಡೀ ಸಮಸ್ಯೆಯನ್ನು ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸೃಷ್ಟಿಸಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.
‘ಕಾಂಗ್ರೆಸ್ ನಾಯಕರು ಸಿಎಂ ಬದಲಾವಣೆ ಆಗುವ ವಿಚಾರವನ್ನು ಹುಟ್ಟು ಹಾಕಲು ಯತ್ನಿಸುತ್ತಿದ್ದಾರೆ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂಬರುವ ಕರ್ನಾಟಕ ವಿಧಾನಸಭೆಚುನಾವಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸ್ಪರ್ಧಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಬೊಮ್ಮಾಯಿ ಅವರು ರೈತರಿಗೆ, ಯುವಕರಿಗೆ, ಎಸ್ಸಿ ಮತ್ತು ಎಸ್ಟಿ ಜನರಿಗಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ನಾವು ಪೂರ್ಣ ಬಹುಮತದೊಂದಿಗೆ ಹಿಂತಿರುಗುತ್ತೇವೆ. 150 ಸ್ಥಾನಗಳ ಗೆಲ್ಲಲಿದ್ದೇವೆ ಎಂದು ಸಿಂಗ್ ಪ್ರತಿಪಾದಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.