ಬೆಂಗಳೂರು: ದೇವರಾಜ ಅರಸು ಅವರ ಜನ್ಮದಿನ ನಮ್ಮ ಕರ್ತವ್ಯಗಳನ್ನು ನೆನಪಿಸುವ ದಿನ. ಹಿಂದುಳಿದ ವರ್ಗಗಳ ಏಳಿಗೆಗಾಗಿ, ಸ್ವಾಭಿಮಾನದ ಬದುಕಿಗಾಗಿ ಸರ್ಕಾರ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದ ಆವರಣದಲ್ಲಿ ದೇವರಾಜ ಅರಸು ಅವರ 106 ನೇ ಜನ್ಮ ದಿನಾಚರಣೆಯ ಅಂಗವಾಗಿ ಶುಕ್ರವಾರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕು ಎನ್ನುವ ಸಂಕಲ್ಪ ಮಾಡುವ ದಿನವಿದು ಎಂದು ಹೇಳಿದರು.
ರಾಜ್ಯದಲ್ಲಿ ಅರಸು ಅವರು ಜಾರಿಗೆ ತಂದ ಕ್ರಾಂತಿಕಾರಿ ಭೂಸುಧಾರಣೆ ಕಾಯ್ದೆ, ನಮ್ಮೆಲ್ಲರಿಗೂ ಪ್ರೇರಣದಾಯಕ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಘೊಷಣೆಯನ್ನು ಅಕ್ಷರಶಃ ಪಾಲಿಸಿದವರು ಎಂದು ಬೊಮ್ಮಾಯಿ ಹೇಳಿದರು.
ರಾಜಕಾರಣದಲ್ಲಿ ಹಲವು ನಾಯಕರನ್ನು ಬೆಳೆಸಿದರು. ಕರ್ನಾಟಕದ ರಾಜಕಾರಣದಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದರು. ಅವರ ಹೆಜ್ಜೆ ಗುರುತುಗಳು ಕರ್ನಾಟಕದ ಭೂಮಿಯಲ್ಲಿ ಶಾಶ್ವತವಾಗಿದೆ. ಅವರ ವಿಚಾರಧಾರೆಗಳು ಪಕ್ಷಾತೀತವಾಗಿ, ಸರ್ವ ಸಮ್ಮತವಾಗಿ ಒಪ್ಪುವಂತಹ ನಾಯಕರು ಎಂದರು.