ಬೆಂಗಳೂರು: ‘ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಮೇಲಿನ ಭ್ರಷ್ಟಾಚಾರ ಆರೋಪದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸ್ಪಷ್ಟಪಡಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವರದಿ ಸಲ್ಲಿಸಿದ ನಂತರ ಶಿಫಾರಸ್ಸುಗಳನ್ನು ಚಾಚೂ ತಪ್ಪದೆ ಪಾಲಿಸಲಾಗುವುದು. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳಿರಲಿ, ಅಧಿಕಾರಿಗಳಿರಲಿ ಕ್ರಮ ಜರುಗಿಸುತ್ತೇವೆ’ ಎಂದರು.
‘ಸಾರ್ವಜನಿಕರಿಂದಲೂ ಬಿಡಿಎ ಅಕ್ರಮಗಳ ಬಗ್ಗೆ ದೂರುಗಳು ಬಂದಿದ್ದವು. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಕೂಡಾ ಗಮನ ಸೆಳೆದಿದ್ದರು. ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿತ್ತು’ ಎಂದು ತಿಳಿಸಿದರು.
‘ಬಿಡಿಎ ಸ್ವಚ್ಛಗೊಳಿಸಬೇಕು. ಸಾಮಾನ್ಯ ಜನರಿಗೆ ಅಗತ್ಯವಿರುವ ಸೇವೆಗಳನ್ನು ದೊರಕಿಸುವ ದೃಷ್ಟಿಯಿಂದ ಬಿಡಿಎ ಸ್ವಚ್ಛಗೊಳಿಸಬೇಕಿದೆ’ ಎಂದೂ ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.