ನವದೆಹಲಿ: ‘ಕರ್ನಾಟಕದಬೆಳಗಾವಿ–ಹುನಗುಂದ–ರಾಯಚೂರು ನಡುವೆ 300 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವಾಲಯ ಅನುಮೋದನೆ ನೀಡಿದ್ದು, ಕಾಮಗಾರಿ ಶೀಘ್ರ ಆರಂಭವಾಗಲಿದೆ’ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ನಮ್ಮ ಮನವಿಯನ್ನು ಮನ್ನಣೆ ನೀಡಿರುವ ಸಚಿವರು, ಯೋಜನೆಗೆ ಅನುಮೋದನೆ ನೀಡಿದ್ದಾರೆ. ಹೆದ್ದಾರಿ ನಿರ್ಮಾಣಕ್ಕೆ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ ಎಂದು ಜೋಶಿ ಟ್ವೀಟ್ ಮಾಡಿದ್ದಾರೆ.
ಬೆಳಗಾವಿ–ರಾಯಚೂರು ನಡುವೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಬೇಕು ಎಂಬುದು ಆ ಭಾಗದ ಜನರ ಬಹುಕಾಲದ ಬೇಡಿಕೆಯಾಗಿತ್ತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆಯಲ್ಲಿ ನಿತಿನ್ ಗಡ್ಕರಿ ಅವರನ್ನು ಬುಧವಾರ ಭೇಟಿ ಮಾಡಿದ ಜೋಶಿ ಅವರು, ರಾಜ್ಯದ ಬಾಕಿ ರಸ್ತೆ ಯೋಜನೆಗಳ ಬಗ್ಗೆ ಚರ್ಚಿಸಿದರು.
ಹುಬ್ಬಳ್ಳಿ–ಧಾರವಾಡ ಬೈಪಾಸ್ ವಿಸ್ತರಣೆ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸುವಂತೆ ಅಧಿಕಾರಿಗಳಿಗೆ ಗಡ್ಕರಿ ನಿರ್ದೇಶನ ನೀಡಿದರು. ಈ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆಗೆ ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳ ಸುತ್ತಲಿರುವ ಚತುಷ್ಪಥ ಹಾಗೂ ಷಟ್ಪಥ ರಸ್ತೆಗಳಿಗೆಅಂಡರ್ಪಾಸ್ ನಿರ್ಮಾಣಕ್ಕೆ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.