ಬೆಂಗಳೂರು: ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣ ಸಂಬಂಧ, ಆರೋಪಿಯೂ ಆಗಿರುವ ವಕೀಲೆ ಮೀರಾ ರಾಘವೇಂದ್ರ ಅವರಿಗೆ ಹಲಸೂರು ಗೇಟ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಪ್ರಕರಣವೊಂದರ ವಿಚಾರಣೆಗಾಗಿ ನಗರದ 2ನೇ ಎಸಿಎಂಎಂ ನ್ಯಾಯಾಲಯಕ್ಕೆ ಗುರುವಾರ ಹಾಜರಾಗಿದ್ದ ಭಗವಾನ್ ಅವರ ಮುಖಕ್ಕೆ, ವಕೀಲೆ ಮೀರಾ ಮಸಿ ಬಳಿದಿದ್ದರು. ಘಟನೆ ಬಗ್ಗೆ ಭಗವಾನ್ ನೀಡಿರುವ ದೂರು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
‘ಪ್ರಕರಣದ ಆರೋಪಿಯೂ ಆಗಿರುವ ವಕೀಲೆ ಮೀರಾಗೆ ನೋಟಿಸ್ ಕಳುಹಿಸಲಾಗಿದೆ. ನೋಟಿಸ್ ತಲುಪಿದ ಮೂರು ದಿನದೊಳಗೆ ವಿಚಾರಣೆಗೆ ತನಿಖಾಧಿಕಾರಿ ಎದುರು ಹಾಜರಾಗುವಂತೆ ಹೇಳಲಾಗಿದೆ. ತಪ್ಪಿದರೆ, ಕಾನೂನು ಕ್ರಮ ಜರುಗಿಸಲಾಗುವುದೆಂದೂ ಎಚ್ಚರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಪ್ರಚಾರಕ್ಕಾಗಿ ಕೃತ್ಯ: ಈ ಹಿಂದೆ ಚುನಾವಣೆಗೆ ಸ್ಪರ್ಧಿಸಿದ್ದ ಮೀರಾ, ಸೋಲು ಅನುಭವಿಸಿದ್ದರು. ರಾಜಕೀಯವಾಗಿ ಬೆಳೆಯುವ ಉದ್ದೇಶ ಇಟ್ಟುಕೊಂಡು ಪ್ರಚಾರಕ್ಕಾಗಿ ಭಗವಾನ್ ಮುಖಕ್ಕೆ ಮಸಿ ಬಳಿದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಈ ಆಯಾಮದಲ್ಲಿ ತನಿಖೆ ಮುಂದುವರಿಸಲಾಗಿದೆ ಎಂದು ಮೂಲಗಳು ಹೇಳಿವೆ.