ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಪರಿಷತ್‌ ಮತ್ತು ರಾಜ್ಯಸಭೆ ಚುನಾವಣೆ: ಇಂದು ಬಿಜೆಪಿ ಪ್ರಮುಖ ನಾಯಕರ ಸಭೆ

ರಾಜ್ಯಸಭೆ, ವಿಧಾನಪರಿಷತ್‌ ಚುನಾವಣೆ ಅಭ್ಯರ್ಥಿಗಳ ಕುರಿತು ಚರ್ಚೆ
Last Updated 13 ಮೇ 2022, 21:45 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಪರಿಷತ್‌ ಮತ್ತು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಬಿಜೆಪಿ ಪ್ರಮುಖ ನಾಯಕರ(ಕೋರ್ ಕಮಿಟಿ) ಸಭೆ ಶನಿವಾರ ನಡೆಯಲಿದೆ.

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯವ ಒಟ್ಟು ಏಳು ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳು, ರಾಜ್ಯಸಭೆಯ ನಾಲ್ಕು ಸ್ಥಾನಗಳಲ್ಲಿ ಎರಡು ಸ್ಥಾನಗಳನ್ನು ಬಿಜೆಪಿ ಅನಾಯಾಸವಾಗಿ ಗೆಲ್ಲಬಹುದು. ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳ ನಾಲ್ಕು ಸ್ಥಾನಗಳಲ್ಲಿ ಮೂರಕ್ಕೆ ಅಭ್ಯರ್ಥಿ ಈಗಾಗಲೇ ಘೋಷಣೆಯಾಗಿದ್ದು, ನಾಲ್ಕನೇ ಸ್ಥಾನಕ್ಕೆ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಆಯ್ಕೆಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ 2023ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಬಹುದು. ಅದರಲ್ಲೂ ವಿಶೇಷವಾಗಿ ಒಬಿಸಿಗೆ ಸೇರಿದ ಸಣ್ಣ– ಪುಟ್ಟ ಜಾತಿಗಳಿಗೆ ಸೇರಿದವರಿಗೆ ಆದ್ಯತೆ ಸಿಗಲಿದೆ. ಈ ಹಿಂದಿನಂತೆಯೇ ಅಚ್ಚರಿಯ ಹೆಸರುಗಳೇ ಬರಬಹುದು. ಪ್ರಮುಖ ನಾಯಕರ ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ರಾಜ್ಯಸಭೆಯ ಎರಡು ಸ್ಥಾನಗಳಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಕೆ.ಸಿ.ರಾಮಮೂರ್ತಿ ಅವರಿಗೆ ಟಿಕೆಟ್‌ ಸಿಗಬಹುದು. ನಿರ್ಮಲಾ ಅವರನ್ನು ರಾಜ್ಯದಿಂದ ಮತ್ತೆ ಆಯ್ಕೆ ಮಾಡುವ ಬಗ್ಗೆ ಪಕ್ಷದಲ್ಲಿ ಯಾರದ್ದೂ ತಕರಾರು ಇಲ್ಲ. ರಾಮಮೂರ್ತಿಯವರನ್ನು ಕಾಂಗ್ರೆಸ್‌ನಿಂದ ಕರೆ ತಂದು ಪುನಃ ಗೆಲ್ಲಿಸಿಕೊಳ್ಳಲಾಗಿತ್ತು. ರೆಡ್ಡಿ ಸಮೂಹದಲ್ಲಿ ಪ್ರಭಾವ ಹೊಂದಿರುವ ಅವರನ್ನು ಈ ಬಾರಿ ಮತ್ತೆ ಕಣಕ್ಕೆ ಇಳಿಸಬಹುದು ಎಂದು ಮೂಲಗಳು ತಿಳಿಸಿವೆ.

ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಅರುಣ್‌ ಶಹಾಪುರ, ಜೆಡಿಎಸ್‌ ತೊರೆದು ಬಂದಿರುವ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಪದವೀಧರ ಕ್ಷೇತ್ರಗಳ ಎರಡು ಸ್ಥಾನಗಳಿಗೆ ಹಾಲಿ ಸದಸ್ಯ ಹಣಮಂತ ರುದ್ರಪ್ಪ ನಿರಾಣಿ ಮತ್ತು ಎಂ.ವಿ.ರವಿಶಂಕರ್‌ ಅವರಿಗೆ ಟಿಕೆಟ್‌ ಖಚಿತವಾಗಿದೆ. ವಿಧಾನಪರಿಷತ್‌ನಲ್ಲಿ ಬಹುಮತ ಪಡೆಯಲು ಬಿಜೆಪಿಗೆ ಒಂದು ಸ್ಥಾನದ ಕೊರತೆ ಇದ್ದು, ಈ ಚುನಾವಣೆಗಳ ಬಳಿಕ ಬಿಜೆಪಿ ಬಹುಮತ ಪಡೆಯಲಿದೆ.

ಚುನಾವಣೆ ಬಗ್ಗೆ ಚರ್ಚೆ:

‘ವಿಧಾನಪರಿಷತ್‌ ಮತ್ತು ರಾಜ್ಯಸಭೆ ಚುನಾವಣೆ ಬಗ್ಗೆ ಪಕ್ಷದ ಪ್ರಮುಖ ನಾಯಕರ ಸಭೆಯಲ್ಲಿ ಚರ್ಚಿಸಲಾಗುವುದು. ಗುರುವಾರ ರಾತ್ರಿ ಪಕ್ಷದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರ ಜತೆಗೂ ಈ ಬಗ್ಗೆ ಚರ್ಚಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರ ಜತೆಗೂ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್‌ ಅವರು ಪ್ರಮುಖರ ಸಭೆಯಲ್ಲಿ ಭಾಗವಹಿಸಲು ಶುಕ್ರವಾರ ರಾತ್ರಿ ಬೆಂಗಳೂರಿಗೆ ಬಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT