ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ನೇಮಕಗೊಂಡಿರುವ ಅರುಣ್ ಸಿಂಗ್ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಅವರ ಅಧ್ಯಕ್ಷತೆಯಲ್ಲೇ ಈ ಸಭೆಗಳು ನಡೆಯಲಿವೆ. ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಡೆಯಿಂದ ಬೇಸತ್ತಿರುವ ಪ್ರಮುಖರು ಅಸಮಾಧಾನ ಹೊರಹಾಕುವುದು ನಿಶ್ಚಿತ. ಸಂಪುಟ ಪುನಾರಚನೆ ಮಾಡುವುದಾದರೆ, ಕೆಲವು ಹಿರಿಯರನ್ನು ಕೈಬಿಡುವ ವಿಚಾರ, ಪಕ್ಷಕ್ಕೆ ವಲಸೆ ಬಂದು ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿರುವುದು ಮತ್ತು ಕೆಲವು ನಾಯಕರು ನಿತ್ಯವೂ ಪಕ್ಷಕ್ಕೆ ಮುಜುಗರ ತರುವ ಹೇಳಿಕೆಗಳನ್ನು ನೀಡಿ ಪಕ್ಷದ ವರ್ಚಸ್ಸಿಗೆ ಹಾನಿ ಮಾಡುತ್ತಿರುವ ವಿಚಾರ ಚರ್ಚೆಯಾಗಲಿದೆ’ ಎಂದು ಮೂಲಗಳು ತಿಳಿಸಿವೆ.