ಯಲಹಂಕ: ಪ್ರಸ್ತುತ ಭಾರತಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ಬಿಜೆಪಿಯನ್ನು ಬೇರುಸಮೇತ ಕಿತ್ತೊಗೆಯುವ ಮೂಲಕ ದೇಶವನ್ನು ದೊಡ್ಡ ಗಂಡಾಂತರದಿಂದ ಪಾರುಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಶಾಸಕ ಕೃಷ್ಣಬೈರೇಗೌಡ ಹೇಳಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಯಲಹಂಕ ವಿಧಾನಸಭಾ ಕ್ಷೇತ್ರದ ವತಿಯಿಂದ ಸೋಲದೇವನಹಳ್ಳಿಯಲ್ಲಿ ಆಯೋಜಿಸಿದ್ದ ‘ಗಾಂಧಿ ನಡಿಗೆ’ ಕಾರ್ಯಾಗಾರದಲ್ಲಿ ಮಾತನಾಡಿ, ‘ಈ ದೇಶಕ್ಕೆ ಮಾರಕವಾಗಿರುವ ಬಿಜೆಪಿಯಿಂದ ದೇಶವನ್ನು ರಕ್ಷಿಸಿಕೊಳ್ಳಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೊಂದೇ ಪರಿಹಾರ’ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ರಾಮಲಿಂಗಾರೆಡ್ಡಿ ಮಾತನಾಡಿ, ‘ಸುಳ್ಳುಗಳನ್ನು ಹೇಳುವ ಮೂಲಕ ಬಿಜೆಪಿ ಅಧಿಕಾರ ಹಿಡಿಯಿತು. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಹೆಸರು ಹೇಳುವುದನ್ನು ಬಿಟ್ಟರೆ, ಅವರ ಉಳಿದ ಮಾತುಗಳೆಲ್ಲವೂ ಸುಳ್ಳೇ ಆಗಿರುತ್ತವೆ’ ಎಂದರು.
ಕಾಂಗ್ರೆಸ್ ಮುಖಂಡ ಎಂ.ವೀರಪ್ಪ ಮೊಯಿಲಿ ಮಾತನಾಡಿ, ‘ರೈತರಿಗೆ ಮಾರಕವಾಗಿರುವ ಕೃಷಿ ಕಾಯಿದೆಗಳನ್ನು ರದ್ದುಗೊಳಿಸಬೇಕೆಂದು ದೆಹಲಿಯಲ್ಲಿ 10 ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಸುಮಾರು 250 ಮಂದಿ ಸತ್ತಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿಯವರು ಅವರನ್ನು ಕರೆಸಿ ಮಾತನಾಡದೆ ಅಥವಾ ಬೇಡಿಕೆಗಳಿಗೆ ಮನ್ನಣೆ ನೀಡದೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಇಡೀ ರೈತಸಮುದಾಯವನ್ನೇ ದೊಡ್ಡ ಕಂಪನಿಗಳಿಗೆ ಮಾರಾಟಮಾಡುವ ಹುನ್ನಾರ ನಡೆಸಿದ್ದಾರೆ’ ಎಂದು ಅವರು ದೂರಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ವಿಧಾನಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಕಾಂಗ್ರೆಸ್ ಮುಖಂಡರಾದ ಗೋಪಾಲಕೃಷ್ಣ, ಕೇಶವ ರಾಜಣ್ಣ, ರಾಜಕುಮಾರ್ ಮತ್ತಿತರರು ಇದ್ದರು.