ಬೆಂಗಳೂರು: ಬಾಬುರಾವ್ ಚಿಂಚನಸೂರ್ ಅವರು ವಿಧಾನ ಪರಿಷತ್ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ನಲ್ಲಿದ್ದ ಚಿಂಚನಸೂರ್ ನಂತರ ಬಿಜೆಪಿ ಸೇರಿದ್ದರು. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಮಾಡಿ ರಾಜೀನಾಮೆ ಸಲ್ಲಿಸಿದರು. ಸಭಾಪತಿಯವರು ರಾಜೀನಾಮೆ ಅಂಗೀಕರಿಸಿದ್ದಾರೆ.
ಪುಟ್ಟಣ್ಣ ಅವರು ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ, ಕಾಂಗ್ರೆಸ್ ಸೇರಿದ್ದರು. ಈಗ ಚಿಂಚನಸೂರ್ ರಾಜೀನಾಮೆ ನೀಡಿದ್ದಾರೆ.
ಕೋಲಿ ಸಮಾಜದ ಪ್ರಮುಖ ನಾಯಕರಾಗಿರುವ ಚಿಂಚನಸೂರ್ ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ಸುದ್ದಿ ಕೆಲವು ದಿನಗಳ ಹಿಂದೆ ಹಬ್ಬಿತ್ತು. ಅದನ್ನು ನಿರಾಕರಿಸಿದ್ದ ಅವರು, ‘ನಾನು ಕಾಂಗ್ರೆಸ್ ಸೇರುವುದಿಲ್ಲ. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಈ ಚುನಾವಣೆಯಲ್ಲಿ ಸೋಲಿಸುವುದೇ ನನ್ನ ಗುರಿ’ ಎಂದಿದ್ದರು.
ಈಗ ಅವರು ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರೂ, ಯಾವ ಪಕ್ಷ ಸೇರುತ್ತಾರೆ ಎಂಬುದು ಇನ್ನೂ ಖಚಿತಗೊಂಡಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.