ಬೆಂಗಳೂರು: ‘ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ರೋಗಕ್ಕೆ ಬಳಸುವ ಔಷಧಿಗೆ ಕೊರತೆ ಇಲ್ಲ. ಈಗಾಗಲೇ ಕೇಂದ್ರದಿಂದ 1000 ವೈಯಲ್ಸ್ ಬಂದಿದೆ. ಈ ಔಷಧಿಯ ಕೊರತೆ ನೀಗಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ’ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಕೋವಿಡ್ ಸೋಂಕು ತಗಲಿ ಮನೆಯಲ್ಲೇ ಪ್ರತ್ಯೇಕವಾಗಿ (ಹೋಮ್ ಐಸೋಲೇಷನ್) ಇರುವವರಿಗೆ ಬಂಟರ ಸಂಘ ವ್ಯವಸ್ಥೆ ಮಾಡಿರುವ 20 ಆಮ್ಲಜನಕ ಸಾಂದ್ರಕಗಳ ವ್ಯವಸ್ಥೆಗೆ ಬುಧವಾರ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.
‘ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಸೇರಿದಂತೆ ರಾಜ್ಯದ ಆರು ಕಡೆಗಳಲ್ಲಿ ಕಪ್ಪು ಶಿಲೀಂಧ್ರ ರೋಗಕ್ಕೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಿಯೂ ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಕೇಂದ್ರದಿಂದ ಇನ್ನೂ ಹೆಚ್ಚಿನ ಔಷಧಿ ಪಡೆಯಲು ಯತ್ನಿಸಲಾಗುತ್ತಿದೆ’ ಎಂದರು.
ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಕಾರ್ಯದರ್ಶಿ ಮಧುಕರ ಶೆಟ್ಟಿ, ಉಮೇಶ ಶೆಟ್ಟಿ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಬೇಲೂರು, ಸಂಘದ ವೈದ್ಯಕೀಯ ವಿಭಾಗದ ಅಧ್ಯಕ್ಷ ಡಾ. ನಿಶಾಕಾಂತ್ ಶೆಟ್ಟಿ ಇದ್ದರು.