ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿದಿನ 1,471 ಟನ್‌ ವೈದ್ಯಕೀಯ ಆಮ್ಲಜನಕ ಪೂರೈಕೆಗೆ ಬಿ.ಎಸ್. ಯಡಿಯೂರಪ್ಪ ಮನವಿ

Last Updated 23 ಏಪ್ರಿಲ್ 2021, 9:40 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕಿತರ ಚಿಕಿತ್ಸೆಗಾಗಿ ಪ್ರತಿ ದಿನ 1471 ಟನ್‌ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೇಡಿಕೆ ಸಲ್ಲಿಸಿದರು.

ಕೋವಿಡ್‌ ಎರಡನೇ ಅಲೆ ಉಲ್ಭಣಗೊಂಡಿರುವ ಬೆನ್ನಲ್ಲೇ ಪ್ರಧಾನಿಯವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೊ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯದ ಪರವಾಗಿ ಬೇಡಿಕೆ ಮಂಡಿಸಿದ ಯಡಿಯೂರಪ್ಪ, ರಾಜ್ಯದಲ್ಲಿ ಆಮ್ಲಜನಕ ಬಳಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಗುರುವಾರ ಒಂದೇ ದಿನ ರಾಜ್ಯದಲ್ಲಿ 500 ಟನ್‌ ಆಮ್ಲಜನಕ ಬಳಕೆಯಾಗಿದೆ. ಕೇಂದ್ರವು ರಾಜ್ಯಕ್ಕೆ ಕೇವಲ 300 ಟನ್‌ ಆಮ್ಲ ಜನಕ ಹಂಚಿಕೆ ಮಾಡಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ಹಲವು ಆರೋಗ್ಯ ಸೇವಾ ಕೇಂದ್ರಗಳನ್ನು ಮುಚ್ಚಬೇಕಾದ ಪರಿಸ್ಥಿತಿ ಬರುತ್ತದೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯಕ್ಕೆ ಏ.25 ರಿಂದ 1,142 ಟನ್‌ ಆಮ್ಲಜನಕದ ಅಗತ್ಯವಿದೆ. ಏ.30 ರ ಬಳಿಕ 1,471 ಟನ್‌ ಆಮ್ಲಜನಕ ಬೇಕಾಗುತ್ತದೆ. ಆದ್ದರಿಂದ ಕೂಡಲೇ 1,471 ಟನ್‌ ಆಮ್ಲಜನಕ ಪೂರೈಸಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪಾಸಿಟಿವ್‌ ಪ್ರಕರಣಗಳ ದರ ಶೇ 16 ರಷ್ಟಿದೆ. ಬೆಂಗಳೂರು ನಗರ ಅತಿ ಹೆಚ್ಚು ಪೀಡಿತವಾಗಿದೆ. ತುಮಕೂರು, ಬಳ್ಳಾರಿ, ಮೈಸೂರು, ಹಾಸನ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲೂ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ತಡೆಯಲು ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಜೊತೆಗೆ ಇತರ ಮುನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ರಾಜ್ಯದ ಆರ್ಥಿಕ ಚಟುವಟಿಕೆಗಳ ಮೇಲೆ ಕನಿಷ್ಠ ಪರಿಣಾಮವಾಗುವ ರೀತಿಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಯಡಿಯೂರಪ್ಪ ವಿವರಿಸಿದರು.

ಕಳೆದ ಆರು ತಿಂಗಳಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ವಹಿಸಿದ್ದು, ಇದೀಗ ಅನುಕೂಲವಾಗಿದೆ. ಸರ್ಕಾರದ ಶಿಫಾರಸಿನ ಮೇರೆಗೆ ರೋಗಿಗಳನ್ನು ದಾಖಲಿಸಲು ಖಾಸಗಿ ಆಸ್ಪತ್ರೆಗಳ ಶೇ. 50 ರಷ್ಟು ಹಾಸಿಗೆಗಳನ್ನು ಪಡೆಯಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ರೆಮ್‌ಡಿಸಿವಿರ್ ಕೊರತೆಯಾಗದಂತೆ ಎಚ್ಚರ ವಹಿಸಲಾಗುತ್ತಿದ್ದು, ಮುಂದಿನ 10 ದಿನಗಳಿಗೆ 2 ಲಕ್ಷ ಡೋಸ್‌ಗಳಷ್ಟು ರೆಮ್‌ಡಿಸಿವಿರ್ ಒದಗಿಸುವಂತೆ ಪ್ರಧಾನಿಯವರಿಗೆ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಮುಖ್ಯಮಂತ್ರಿಗಳು, ನಗರದ 8 ವಲಯಗಳ ಕೋವಿಡ್ ನಿರ್ವಹಣೆ ಉಸ್ತುವಾರಿಗೆ ಸಚಿವರನ್ನು ನೇಮಕ ಮಾಡಲಾಗಿದೆ. ಹಿರಿಯ ಐಎಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಲಸಿಕೆ ಕಾರ್ಯಕ್ರಮದ ಪ್ರಗತಿಯೂ ಉತ್ತಮವಾಗಿದ್ದು, ಈ ವರೆಗೆ 82 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಮೇ 1 ರಿಂದ ಹೊಸ ಲಸಿಕಾ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೂ ಲಸಿಕೆಗಳು ಸಮಾನವಾಗಿ ಹಂಚಿಕೆಯಾಗುವಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT