ಬೆಂಗಳೂರು: ಕೋವಿಡ್ ನಡುವೆಯೂ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ಗರಿಗೆದರಿದ್ದು, ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಸಚಿವ ಸಂಪುಟದ ಸಹೋದ್ಯೋಗಿಗಳ ಸಭೆ ಆಯೋಜಿಸಿದ್ದಾರೆ.
ಮುಖ್ಯಮಂತ್ರಿಯವರ ನಿವಾಸ ‘ಕಾವೇರಿ’ಯಲ್ಲಿ ಸಂಜೆ 6 ಗಂಟೆಗೆ ಸಭೆ ನಡೆಯಲಿದೆ. ಎಲ್ಲ ಸಚಿವರು ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಕೋವಿಡ್, ಪ್ರವಾಹ, ವಿಧಾನ ಮಂಡಲ ಅಧಿವೇಶನ ಮತ್ತಿತರ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
ಆರ್ಥಿಕ ಚಟುವಟಿಕೆಗೆ ಮತ್ತಷ್ಟು ಉತ್ತೇಜನ ನೀಡಲು ಮತ್ತು ಮುಂದಿನ ದಿನಗಳಲ್ಲಿ ಎಲ್ಲ ಸಚಿವರು ತಮ್ಮ ಇಲಾಖೆಗಳ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.ಸೆ. 21ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ವಿವಿಧ ವಿಷಯಗಳನ್ನು ಪ್ರಸ್ತಾವಿಸಿ ಆಡಳಿತ ಪಕ್ಷದ ವಿರುದ್ಧ ಮುಗಿಬೀಳುವುದು ಖಚಿತ. ವಿರೋಧ ಪಕ್ಷಗಳ ದಾಳಿಯನ್ನು ಸದನದಲ್ಲಿ ಎದುರಿಸಲು ಸಜ್ಜುಗೊಳ್ಳಬೇಕಾದ ಬಗ್ಗೆಯೂ ಚರ್ಚೆ ನಡೆಯಲಿದೆ.