ಬೆಂಗಳೂರು: ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಸಂಸದೀಯ ಮಂಡಳಿ ಸದಸ್ಯರನ್ನಾಗಿ ಮಾಡಿರುವುದರಿಂದ ಕರ್ನಾಟಕ ಮಾತ್ರವಲ್ಲ ಇಡೀ ದಕ್ಷಿಣ ಭಾರತದಲ್ಲಿ ಪಕ್ಷಕ್ಕೆ ಪ್ರಯೋಜನವಾಗಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಗುರುವಾರ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಭಿನಂದಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಈ ನೇಮಕ ಪಕ್ಷದ ಕಾರ್ಯಕರ್ತರಲ್ಲಿ ಹರ್ಷ ತಂದಿದೆ. ಅವರ ಸುದೀರ್ಘ ಅನುಭವ ಪಕ್ಷಕ್ಕೆ ಸಿಗಲಿದೆ ಎಂದ ಅವರು ಹೇಳಿದರು.
ನಾಲ್ಕು ಬಾರಿ ಮುಖ್ಯಮಂತ್ರಿ, ಮೂರು ಬಾರಿ ವಿರೋಧಪಕ್ಷದ ನಾಯಕ, ೮ ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದಾರೆ. ಸದಾ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುತ್ತಲೇ ಬಂದಿದ್ದಾರೆ. ಅವರಿಗೆ ಪಕ್ಷದ ಅತ್ಯಂತ ಮಹತ್ವದ ನಿರ್ಣಾಯಕ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ ಎಂದು ಅರುಣ್ ಸಿಂಗ್ ಹೇಳಿದರು.