ಬೆಂಗಳೂರು: ಶಾಸಕ ಬಿ.ಎಸ್. ಯಡಿಯೂರಪ್ಪ, ಅವರ ಮಗ ಬಿ.ವೈ. ವಿಜಯೇಂದ್ರ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಆ.17ರಂದು ಖುದ್ದಾಗಿ ಅಥವಾ ವಕೀಲರ ಮೂಲಕವಾಗಲಿ ಹಾಜರಾಗಿ ವಿವರಣೆ ನೀಡುವಂತೆ ನೋಟಿಸ್ನಲ್ಲಿ ತಿಳಿಸಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಅನುಷ್ಠಾನ ಮಾಡುವಾಗ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರು ಲಂಚ ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಖಾಸಗಿ ದೂರು ಸಲ್ಲಿಸಿದ್ದರು.
ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆ ನಡೆಸಲು ರಾಜ್ಯಪಾಲರ ಪೂರ್ವಾನುಮತಿ ಬೇಕಿತ್ತು. ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರಿಂದ ವಿಶೇಷ ನ್ಯಾಯಾಲಯ ಖಾಸಗಿ ದೂರನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಅಬ್ರಹಾಂ, ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣೆ ಆರಂಭಿಸಿರುವ ಹೈಕೋರ್ಟ್, ಈಗ ಸಚಿವರಾಗಿರುವ ಎಸ್.ಟಿ. ಸೋಮಶೇಖರ್, ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ ಮರಡಿ, ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ, ಪುತ್ರಿ ಪದ್ಮಾವತಿ, ಅಳಿಯ ಸಂಜಯ್ ಶ್ರೀ, ಉದ್ಯಮಿ ಚಂದ್ರಕಾಂತ ರಾಮಲಿಂಗಂ ಅವರಿಗೂ ನೋಟಿಸ್ ನೀಡಲು ಮಂಗಳವಾರ ಆದೇಶಿಸಿತ್ತು.