ಬೆಂಗಳೂರು: ರಾಜ್ಯದಲ್ಲಿ ಪಟಾಕಿ ಮಾರಾಟ ಮಾಡುವುದು ಮತ್ತು ಸಿಡಿಸುವುದನ್ನು ನಿಷೇಧಿಸಲು ಕೋರಿರುವ ಮನವಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
‘ನಾಗರಿಕರ ಆರೋಗ್ಯ ಮತ್ತು ಪರಿಸರದ ಮೇಲಾಗುವ ಪರಿಣಾಮ ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಮನವಿಯನ್ನು ಮೂರು ತಿಂಗಳ ಒಳಗೆ ಪರಿಗಣಿಸಬೇಕಾಗುತ್ತದೆ’ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.
ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಯಾದ ‘ಸಮರ್ಪಣ’ ಸಂಸ್ಥೆಯು ಕಳೆದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
‘ಕೋವಿಡ್ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ. 2020ರ ನವೆಂಬರ್ 9ರಿಂದ 30ರವರೆಗೆ ನವದೆಹಲಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ ಹೊರಡಿಸಿತ್ತು’ ಎಂದೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.