ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಶಾಂತಿಯುತ, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಸಹಕರಿಸಿದ ಜಿಲ್ಲೆಯ ಜನತೆ, ಕ್ಷೇತ್ರದ ಮತದಾರರು, ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಅವರು ಚುನಾವಣಾ ಆಯೋಗದ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.
ಒಟ್ಟಾರೆ ಚುನಾವಣಾ ಪ್ರಕ್ರಿಯೆಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಿದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಬೆಳಗಾವಿ: ಕೋವಿಡ್ - 19 ಸೋಂಕಿತರಾಗಿರುವ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತ ಚಲಾಯಿಸಲಿಲ್ಲ.
ಪ್ರಕಟಣೆ ನೀಡಿರುವ ಅವರು, ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಕನಿಷ್ಠ 80 ಸಾವಿರದಿಂದ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾನು ಭವಿಷ್ಯ ಹೇಳುವುದಿಲ್ಲ. ಕ್ಷೇತ್ರದ ಎಲ್ಲ ಕಡೆಯಿಂದ ಮಾಹಿತಿ ಪಡೆದು ಹೇಳುತ್ತಿದ್ದೇನೆ. ಸತೀಶ ಜಾರಕಿಹೊಳಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. ಮತದಾನ ಮಾಡಿದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಶಾಂತಿಯುತವಾಗಿ ಶನಿವಾರ ನಡೆದಿದ್ದು, ಶೇ 55.61ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಶೇ 54.03ರಷ್ಟು ಮತದಾನವಾಗಿದೆ.
2019ರಲ್ಲಿ ಶೇ 67.31 ಹಾಗೂ 2014ರಲ್ಲಿ ಶೇ 68.25ರಷ್ಟು ಮತದಾನ ಆಗಿತ್ತು.
ಬೆಳಗಾವಿಯಲ್ಲಿ ಶೇ 54.73ರಷ್ಟು, ಬಸವ ಕಲ್ಯಾಣ ಶೇ 59.57, ಮಸ್ಕಿಯಲ್ಲಿ ಶೇ 70.48ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭೆ ಉಪಚುನಾವಣೆಗೆ ಶನಿವಾರ ಒಟ್ಟು ಶೇ 70.48 ರಷ್ಟು ಮತದಾನವಾಗಿದೆ.
ಒಟ್ಟು 2,06,429 ಮತದಾರರ ಪೈಕಿ 1,45,482 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆಯು ಪುರುಷರಗಿಂತಲೂ ಹೆಚ್ಚಿನ ಪ್ರಮಾಣದಲ್ಲಿತ್ತು. ಆದರೆ, ಮತದಾನದಲ್ಲಿ ಹಿಂದೆ ಉಳಿದಿದ್ದಾರೆ.
73,311 ಪುರುಷ ಮತದಾರರು ಮತ ಚಲಾಯಿಸಿದ್ದರೆ, 72,169 ಮಹಿಳಾ ಮತದಾರರು ಮತ ನೀಡಿದ್ದಾರೆ. ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೂ ಮತದಾನಕ್ಕೆ ಅವಕಾಶ ನೀಡಲಾಗಿತ್ತು.
ಕ್ಷೇತ್ರದಲ್ಲಿ ಹಿಂದೆ ನಡೆದ ವಿಧಾನಸಭೆ ಚುನಾವಣೆಗಳ ಮತದಾನಕ್ಕೆ ಹೋಲಿಸಿದರೆ, ಈ ಬಾರಿ ಅತಿಹೆಚ್ಚು ಮತದಾನವಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸವದತ್ತಿ- ಯಲ್ಲಮ್ಮ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಅವರು ಪಿಪಿಇ ಕಿಟ್ ಧರಿಸಿ ಸವದತ್ತಿಯ ಶಾಸಕರ ಮಾದರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಅವರಿಗೆ ಕೋವಿಡ್- 19 ಶುಕ್ರವಾರ ದೃಢಪಟ್ಟಿತ್ತು.
ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ಮಸ್ಕಿ ಪಟ್ಟಣದ ಕೇಂದದ್ರ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಅವರಿಗೆ ಕೋವಿಡ್ ದೃಢಪಟ್ಟಿದ್ದು, ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಕೋವಿಡ್ ಸೋಂಕಿತರಿಗೆ ಸಂಜೆ 6 ಗಂಟೆ ಬಳಿಕ ಮತದಾನಕ್ಕೆ ಅವಕಾಶ ನೀಡಲಾಗಿತ್ತು.
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ಗೋಕಾಕದ ಜಿ.ಆರ್.ಬಿ.ಸಿ. ಕಾಲೊನಿಯ ಕನ್ನಡ ಸರ್ಕಾರಿಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 162ರಲ್ಲಿ ಶನಿವಾರ ಸಂಜೆ ಮತ ಚಲಾಯಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಬೇಕು’ ಎಂದು ಮನವಿ ಮಾಡಿದರು.
‘ಕ್ಷೇತ್ರದಾದ್ಯಂತ ಉತ್ತಮ ಮತದಾನವಾಗುತ್ತಿದೆ. ನನ್ನ ಗೆಲುವು ನಿಶ್ಚಿತ’ ವಿಶ್ವಾಸ ವ್ಯಕ್ತಪಡಿಸಿದರು.
ರಾಯಚೂರು: ಜಿಲ್ಲೆಯ ಮಸ್ಕಿ ವಿಧಾನಸಭೆ ಶಾಂತಿಯುತವಾಗಿ ಮುಂದುವರಿದಿದ್ದು, ಸಂಜೆ 5 ಗಂಟೆವರೆಗೂ ಶೇ 62.76 ರಷ್ಟು ಮತದಾನವಾಗಿದೆ.