ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 4,244 ಅಂಗನವಾಡಿಗಳನ್ನು ಆರಂಭಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಅಂಗನವಾಡಿ, ಪೋಷಣ್ ಅಭಿಯಾನ–2.0 ಅಡಿ ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಅನುದಾನದಲ್ಲಿ ಇವುಗಳನ್ನು ತೆರೆಯಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಪ್ರಮುಖ ತೀರ್ಮಾನಗಳು
* ಕೊಂಕಣ ರೈಲ್ವೆ ನಿಗಮದ ಅಭಿವೃದ್ಧಿ ಕಾಮಗಾರಿಗಳಿಗಾಗಿ ರಾಜ್ಯ ಸರ್ಕಾರದ ಪಾಲಿನ ಮೊತ್ತವಾದ ₹73.53 ಕೋಟಿ (ಶೇ 15) ಭರಿಸಲು ಅನುಮೋದನೆ.
* ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು ಕೇಂದ್ರ ನೀತಿ ಆಯೋಗದ ಮಾದರಿಯಲ್ಲಿ ರಚಿಸಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ.
*ವಿಜಯಪುರದಲ್ಲಿ ನ್ಯಾಯಾಲಯ ಡೂಪ್ಲೆಕ್ಸ್ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ಕಾಮಗಾರಿ ₹12.36 ಕೋಟಿ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ
*ಉಡುಪಿಯ ಮಲ್ಪೆ ಮೀನುಗಾರಿಕೆ ಬಂದರಿನ 3 ನೇ ಹಂತದ ಅಭಿವೃದ್ಧಿ ಕಾಮಗಾರಿಗಳ ₹49.90 ಕೋಟಿ ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.
*ಸೇಡಂನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಚಾಲನೆ ಮತ್ತು ಮೆಕ್ಯಾನಿಕಲ್ ತರಬೇತಿ ನೀಡುವ ಸಂಸ್ಥೆ ಸ್ಥಾಪನೆಗೆ ಒಪ್ಪಿಗೆ.