ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ: ಬಿಎಸ್‌ವೈ

ನ.11ರ ನಂತರ ಬದಲಾವಣೆ ಆಗಲಿದೆ ಕಾದುನೋಡಿ
Last Updated 30 ಅಕ್ಟೋಬರ್ 2020, 19:35 IST
ಅಕ್ಷರ ಗಾತ್ರ

ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶುಕ್ರವಾರ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಎರಡೂ ಕ್ಷೇತ್ರಗಳ ಮತ ಎಣಿಕೆ ಮುಗಿದು, ಫಲಿತಾಂಶ ಪ್ರಕಟವಾದ ತಕ್ಷಣವೇ ದೆಹಲಿಗೆ ಹೋಗುತ್ತೇನೆ. 24 ಗಂಟೆಗಳಲ್ಲಿ ಮರಳಿ ಬಂದು ಸಂಪುಟ ವಿಸ್ತರಣೆ ಮಾಡುತ್ತೇನೆ’ ಎಂದರು.

ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಸರ್ಕಾರದ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಕಾಂಗ್ರೆಸ್‌ ಮುಖಂಡರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಹೌದು ಚುನಾವಣೆ ಬಳಿಕ ನಿಶ್ಚಿತವಾಗಿಯೂ ಬದಲಾವಣೆ ಆಗಲಿದೆ. ಎರಡೂ ಕ್ಷೇತ್ರಗಳಲ್ಲಿ ನಾವು ದೊಡ್ಡ ಅಂತರದಿಂದ ಗೆಲ್ಲುತ್ತೇವೆ. ಆ ಬಳಿಕ ಈ ಪ್ರಶ್ನೆಗೆ ಅವರೇ ಉತ್ತರ ನೀಡುತ್ತಾರೆ‌’ ಎಂದು ಹೇಳಿದರು.

‘ಅವರು ವೈಯಕ್ತಿಕವಾಗಿ ಟೀಕೆ ಮಾಡುತ್ತಿದ್ದಾರೆ. ಈವರೆಗೂ ನಾನು ಒಂದು ಶಬ್ದವನ್ನೂ ಮಾತನಾಡಿಲ್ಲ. ಚುನಾವಣೆ ಮುಗಿಯುವವರೆಗೂ ನಾನು ಯಾರನ್ನೂ ಟೀಕಿಸುವುದಿಲ್ಲ, ಯಾರ ಬಗ್ಗೆಯೂ ಮಾತನಾಡುವುದಿಲ್ಲ’ ಎಂದರು.

‘ಉಪ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳುವುದು ಬೇಡ ಎಂಬ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ, ಜೆಡಿಎಸ್‌ ನಾಯಕರಾದ ಎಚ್‌.ಡಿ.ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಎಲ್ಲರೂ ಪ್ರಚಾರಕ್ಕೆ ಹೋಗಿದ್ದಾರೆ. ನಾನು ಹೋಗದಿದ್ದರೆ ತಪ್ಪು ಸಂದೇಶ ರವಾನೆ ಆಗುತ್ತದೆ. ಈ ಕಾರಣದಿಂದ ಶುಕ್ರವಾರ ಶಿರಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದೇನೆ. ಶನಿವಾರ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಾಗುವುದು’ ಎಂದು ಯಡಿಯೂರಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT