ಮೈಸೂರು/ಚಾಮರಾಜನಗರ: ಕೆಪಿಪಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ (61) ಅವರು ತೀವ್ರ ಹೃದಯಾಘಾತದಿಂದ ಮೈಸೂರಿನ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.
ಬೆಳಿಗ್ಗೆ ವಾಯುವಿಹಾರದಿಂದ ವಾಪಸಾಗಿದ್ದ ಅವರು ಮನೆಯ ಮಹಡಿಯಿಂದ ಕಾರು ಚಾಲಕ ನನ್ನು ಕರೆದಿದ್ದರು. ಚಾಲಕ ತೆರಳಿ ನೋಡುವಷ್ಟರಲ್ಲಿ ವಾಂತಿ, ರಕ್ತದ ಮಡುವಿನಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರಿಗೆ ಪತ್ನಿ ವೀಣಾ, ಮಕ್ಕಳಾದ ವಕೀಲ ದರ್ಶನ್ ಹಾಗೂ ಧೀರೇನ್ ಇದ್ದಾರೆ.
ನಗರದ ವಿಜಯನಗರ 3ನೇ ಹಂತದಲ್ಲಿರುವ ಅವರ ಮನೆಯಲ್ಲಿ, ನಂತರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ, ಸಂಸದರಾದ ಕೆ.ಸಿ.ವೇಣುಗೋಪಾಲ್, ವಿ.ಶ್ರೀನಿವಾಸ ಪ್ರಸಾದ್, ಡಿ.ಕೆ.ಸುರೇಶ್ ಮೊದಲಾದವರು ಅಂತಿಮ ದರ್ಶನ ಪಡೆದರು.
ಶನಿವಾರ ರಾತ್ರಿ, ಅವರ ಹುಟ್ಟೂರಾದ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿಗೆ ಪಾರ್ಥಿವ ಶರೀರವನ್ನು ಸಾಗಿಸಲಾಯಿತು. ಭಾನುವಾರ ಬೆಳಿಗ್ಗೆ ಗ್ರಾಮಸ್ಥರು, ಸಂಬಂಧಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಮಧ್ಯಾಹ್ನ ಅವರ ಜಮೀನಿನಲ್ಲಿರುವ ಅವರ ತಂದೆ–ತಾಯಿ ಸಮಾಧಿಯ ಬಳಿಯೇ ಅಂತ್ಯಕ್ರಿಯೆ ನಡೆಯಲಿದೆ.
ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಧ್ರುವನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
— Siddaramaiah (@siddaramaiah) March 11, 2023
ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ.
1/2 pic.twitter.com/UME2UE9vOd
ಜನಪ್ರಿಯ ನಾಯಕರು, ಕೆಪಿಸಿಸಿ ಕಾರ್ಯಾಧ್ಯಕ್ಷ ಶ್ರೀ ಆರ್.ಧ್ರುವನಾರಾಯಣ ಅವರು ಇಂದು ಹಠಾತ್ ನಿಧನರಾದ ಸುದ್ದಿ ತಿಳಿದು ಅತ್ಯಂತ ಆಘಾತವಾಗಿದೆ. ಒಬ್ಬ ಸಕ್ರಿಯ ರಾಜಕಾರಣಿಯನ್ನು ನಾಡು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S.Yediyurappa (@BSYBJP) March 11, 2023
ಇವನ್ನೂ ಓದಿ:
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.