ಮಂಡ್ಯ: ‘ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರದ ಮನವೊಲಿಸಿ ಯೋಜನೆಗೆ ವಿಶೇಷ ಅನುಮೋದನೆ ಪಡೆಯಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಹೇಳಿದರು.
ಮುಖ್ಯಮಂತ್ರಿಯಾಗಿ 5ನೇ ಬಾರಿಗೆ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು.
‘ಕೆಆರ್ಎಸ್ ಜಲಾಶಯ ನಿರ್ಮಾಣವಾದ ನಂತರ 36 ಬಾರಿ ಗರಿಷ್ಠ ಮಟ್ಟ ತಲುಪಿದೆ. ಸತತವಾಗಿ ಮೂರನೇ ಬಾರಿ ತುಂಬಿರುವುದು ಸಂತಸದ ವಿಚಾರ. ನಾನು 5ನೇ ಬಾರಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸುತ್ತಿರುವುದು ನನ್ನ ಪಾಲಿನ ಭಾಗ್ಯ. ಈ ಬಾರಿ ರಾಜ್ಯದ ಎಲ್ಲಾ ಜಲಾಶಯಗಳು ತುಂಬಿದ್ದು ಕೃಷಿ ಹಾಗೂ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ. ಕೆಲವೆಡೆ ಅತಿವೃಷ್ಟಿ ಉಂಟಾಗಿದ್ದು ತೊಂದರೆಗೆ ಸಿಲುಕಿರುವ ಜನರಿಗೆ ಶೀಘ್ರ ಪರಿಹಾರ ವಿತರಿಸಲಾಗುವುದು’ ಎಂದರು.
‘ಬೃಂದಾವನ ಉದ್ಯಾನವನ್ನು ವಿಶ್ವದರ್ಜೆಯ ಪ್ರವಾಸಿ ತಾಣವನ್ನಾಗಿ ರೂಪಿಸಲು ಕ್ರಮ ವಹಿಸಲಾಗುವುದು. ಇದೇ ಮೊದಲ ಬಾರಿಗೆ ನಮ್ಮ ಸರ್ಕಾರ ಕೆಆರ್ಎಸ್ ಜಲಾಶಯದ 16 ಗೇಟ್ಗಳ ದುರಸ್ತಿಗೆ ₹ 8.5 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಂಡಿದೆ. ನೀರಾವರಿ ಇಲಾಖೆ ಅಡಿ ರಾಜ್ಯದಾದ್ಯಂತ ₹ 75 ಸಾವಿರ ಕೋಟಿ ವೆಚ್ಚದಲ್ಲಿ 28 ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ’ ಎಂದರು.
ಬಂಧನ, ಬಿಡುಗಡೆ: ಬಾಗಿನ ಅರ್ಪಣೆ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡಲು ಮುಂದಾಗಿದ್ದ ವಿವಿಧ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿದರು. ಮುಂಜಾಗ್ರತಾ ಕ್ರಮವಾಗಿ ಕೆಲವರನ್ನು ಬೆಳಿಗ್ಗೆಯೇ ವಶಕ್ಕೆ ಪಡೆಯಲಾಗಿತ್ತು. ಹಲವು ಮುಖಂಡರು ಮನೆಯಿಂದ ಹೊರಗೆ ಬಾರದಂತೆ ದಿಗ್ಬಂಧನ ವಿಧಿಸಲಾಗಿತ್ತು.