ಹುಬ್ಬಳ್ಳಿ: ಸೋಮವಾರದಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ರಾಜ್ಯದಾದ್ಯಂತ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆ ಎದುರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯ ಆದರ್ಶನಗರದ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ವಿದ್ಯಾರ್ಥಿಗಳು ಕೋವಿಡ್ ಭಯ ಮರೆತು ಪರೀಕ್ಷೆ ಬರೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಹಿಜಾಬ್ ವಿವಾದದ ಕುರಿತು ಈಗಾಗಲೇ ಕೋರ್ಟ್ ತೀರ್ಪು ನೀಡಿದೆ. ತೀರ್ಪು ಬಂದ ನಂತರ ವಿವಾದಾತ್ಮಕ ಹೇಳಿಕೆ ನೀಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಇದೇ 30 ರಂದು ಬಜೆಟ್ ಅಧಿವೇಶನ ಮುಕ್ತಾಯವಾಗಲಿದೆ. ಬಜೆಟ್ನಲ್ಲಿ ಘೋಷಣೆ ಮಾಡಿರುವ ಎಲ್ಲ ಯೋಜನೆಗಳು ಅನುಷ್ಠಾನಕ್ಕೆ ಬರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅದಕ್ಕೆ ಹಣಕಾಸಿನ ನೆರವು ದೊರೆಯಬೇಕು ಅನ್ನೋ ಕಾರಣಕ್ಕೆ ಸಮಿತಿಯನ್ನು ಸಹ ರಚನೆ ಮಾಡಲಾಗಿದೆ ಎಂದು ತಿಳಿಸಿದರು.
ಅಂತರರಾಜ್ಯ ಜಲ ವಿವಾದ ಶೀಘ್ರದಲ್ಲೇ ಬಗೆಹರಿಯಲಿದೆ. ಕಾನೂನಾತ್ಮಕ ರೀತಿಯಲ್ಲಿ ನ್ಯಾಯಲಯಗಳಿಂದ ಪರಿಹಾರ ಕಂಡುಕೊಳ್ಳಬೇಕಿದೆ. ಕೆಲವು ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಗತ್ಯವಿದ್ದರೆ ಕೇಂದ್ರಕ್ಕೆ ರಾಜ್ಯದ ನಿಯೋಗ ಕೊಂಡೊಯ್ಯಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿ-ಧಾರವಾಡ ಭಾಗಕ್ಕೆ ಬೆಂಗಳೂರಿನ ಜಯದೇವ ಹೃದಯ ಸಂಸ್ಥೆ ತರುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ. ಈ ಕುರಿತು ಸೂಕ್ತ ಸ್ಥಳ ಹುಡುಕುವಂತೆ ಧಾರವಾಡದ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಕೋವಿಡ್ ನಂತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೆಚ್ಚಿನ ಮಹತ್ವ ನೀಡಿದ್ದೇವೆ ಎಂದರು.