ಬೆಂಗಳೂರು: ‘ಶಿವಮೊಗ್ಗದಲ್ಲಿ ಹರ್ಷ ಎಂಬಾತನ ಕೊಲೆ ಪ್ರಕರಣ ತನಿಖೆ ನಡೆಯುತ್ತಿದ್ದು, ಕೃತ್ಯದಲ್ಲಿ ಭಾಗಿಯಾದವರ ಸುಳಿವು ಸಿಕ್ಕಿದೆ. ಅತಿ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು ‘ಭಾನುವಾರ ರಾತ್ರಿ ಹರ್ಷ ಎಂಬ ಹುಡುಗನಹತ್ಯೆಯಾಗಿದೆ. ಅವನ ಹೆಸರೇ ಹಿಂದೂ ಹರ್ಷ ಅಂತ. ಆತ ನಮ್ಮ ಸಂಘಟನೆಯ ಕಾರ್ಯಕರ್ತ’ ಎಂದರು.
‘ಈ ಕೊಲೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಪ್ರಕರಣದಲ್ಲಿ ನ್ಯಾಯ ಸಮ್ಮತವಾದ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ಯಾರೂ ಕೂಡಾ ಉದ್ವೇಗಕ್ಕೆ ಒಳಗಾಗಬಾರದು’ ಎಂದರು.
‘ಶಿವಮೊಗ್ಗದಲ್ಲಿ ಇಬ್ಬರು ಸಚಿವರಿದ್ದಾರೆ ಅವರೇ ಕಾರಣ‘ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಸಿದ್ದರಾಮಯ್ಯ ಯಾವಾಗಲೂ ತರ್ಕವನ್ನು ಬಿಟ್ಟೇ ಮಾತಾಡುತ್ತಾರೆ‘ ಎಂದರು.