ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ 7ರವರೆಗಿನ ಸ್ಥಿತಿ ಅವಲೋಕಿಸಿ ಲಾಕ್‌ಡೌನ್‌ ವಿಸ್ತರಣೆ ತೀರ್ಮಾನ: ಯಡಿಯೂರಪ್ಪ

Last Updated 29 ಮೇ 2021, 10:08 IST
ಅಕ್ಷರ ಗಾತ್ರ

ಬೆಂಗಳೂರು: ‘ಸದ್ಯ ಜೂನ್‌ 7ರವರೆಗೆ ಲಾಕ್‌ಡೌನ್‌ ಜಾರಿಯಲ್ಲಿ ಇರಲಿದ್ದು, ಅಲ್ಲಿಯವರೆಗಿನ ಸ್ಥಿತಿಗತಿ ಅವಲೋಕಿಸಿ ಲಾಕ್‌ಡೌನ್‌ ವಿಸ್ತರಿಸುವ ಬಗ್ಗೆ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಕೋವಿಡ್‌ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಾದ ಮೈಸೂರು, ಹಾಸನ, ಬೆಳಗಾವಿ, ಕಲಬುರ್ಗಿ ಮತ್ತು ವಿಜಯಪುರದ ಸಂಸದರು ಮತ್ತು ಶಾಸಕರ ಜೊತೆ ಶನಿವಾರ ಸುಮಾರು ಎರಡೂವರೆ ಗಂಟೆ ವಿಡಿಯೊ ಸಂವಾದ ನಡೆಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

‘ಸಂವಾದದಲ್ಲಿ ಭಾಗವಹಿಸಿದ ಸಂಸದರು, ಶಾಸಕರು ಕೋವಿಡ್ ನಿರ್ವಹಣೆಯ ಜೊತೆಗೆ ತಳಹಂತದ ಹಲವು ಸಮಸ್ಯೆಗಳ ಕುರಿತು ಗಮನ ಸೆಳೆದಿದ್ದಾರೆ. ಅವುಗಳನ್ನು ಶೀಘ್ರವೇ ಬಗೆಹರಿಸಲಾಗುವುದು’ ಎಂದು ಮುಖ್ಯಮಂತ್ರಿ ಹೇಳಿದರು.

‘ಕೋವಿಡ್‌ ಪಾಸಿಟಿವಿಟಿ ದರ ಶೇ 10 ಕ್ಕಿಂತ ಕಡಿಮೆ ಮಾಡಲು ಅಗತ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಲ್ಲದೆ, ಮರಣ ಪ್ರಮಾಣ ರಾಜ್ಯದಲ್ಲಿ ಶೇ 1.7 ರಷ್ಟಿದ್ದು, ಅದನ್ನು ಕಡಿಮೆ ಮಾಡಬೇಕು’ ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.

‘ರಾಜ್ಯದಲ್ಲಿ ಒಟ್ಟು ವರದಿಯಾಗುತ್ತಿರುವ ಕೋವಿಡ್‌ ಪ್ರಕರಣಗಳ ಪೈಕಿ, ಬೆಂಗಳೂರು ನಗರ, ಮೈಸೂರು, ತುಮಕೂರು, ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಶೇ 60 ವರದಿಯಾಗುತ್ತಿದೆ. ಇದನ್ನು ಕಡಿಮೆಗೊಳಿಸಬೇಕು. ಸೋಂಕು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದೂ ಸೂಚಿಸಿದರು.

‘ಕೋವಿಡ್ ಎರಡನೇ ಅಲೆ, ನಿರೀಕ್ಷೆಗೂ ಮೀರಿ ಬಾಧಿಸಿದೆ. ಆದರೆ, ಈಗ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗೆಂದು ಕೈಕಟ್ಟಿ ಕುಳಿತುಕೊಳ್ಳುವಂತೆ ಇಲ್ಲ. ಗ್ರಾಮೀಣ ಪ್ರದೇಶದಲ್ಲಿ ಪ್ರಕರಣಗಳ ಪ್ರಮಾಣ ಹೆಚ್ಚಾಗುತ್ತಿದೆ. ಈ ಕುರಿತು ಹೆಚ್ಚಿನ ಗಮನ ಹರಿಸಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ಸೋಂಕಿತರಿಗೆ ಮನೆಯಲ್ಲೇ ಆರೈಕೆ ನೀಡುವ ಬದಲು ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸಲು ಮನವೊಲಿಸಬೇಕು’ ಎಂದು ಮುಖ್ಯಮಂತ್ರಿ ಹೇಳಿದರು.

‘ಸಂಸದರು ಮತ್ತು ಶಾಸಕರು ಅವರವರ ಕ್ಷೇತ್ರಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಿ, ಸೋಂಕಿತರನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡಬೇಕು. ಇದರಿಂದ ಮರಣ ಪ್ರಮಾಣ ಕಡಿಮೆ ಆಗಲಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳು, ಔಷಧ, ಆಮ್ಲಜನಕ, ವಿವಿಧ ಉಪಕರಣಗಳು ಅಗತ್ಯಕ್ಕೆ ಅನುಗುಣವಾಗಿ ಸಮರ್ಪಕವಾಗಿ ಹಂಚಿಕೆಯಾಗಬೇಕು. ಎಲ್ಲಿಯೂ ಸಮಸ್ಯೆ ತಲೆದೋರದಂತೆ ಸಂಪನ್ಮೂಲಗಳ ದಕ್ಷ ಬಳಕೆಯನ್ನು ಖಾತರಿಪಡಿಸಬೇಕು’ ಎಂದೂ ಮುಖ್ಯಮಂತ್ರಿ ಸಲಹೆ ನೀಡಿದರು..

‘ಆಶಾ ಕಾರ್ಯಕರ್ತೆಯರ ಬಾಕಿ ವೇತನ ಬಿಡುಗಡೆಗೆ ಕ್ರಮ ವಹಿಸಲಾಗಿದೆ. ಎರಡು ಮೂರು ದಿನಗಳಲ್ಲಿಯೇ ವೇತನ ಪಾವತಿ ಆಗಲಿದೆ’ ಎಂದು ಅವರು ತಿಳಿಸಿದರು.

ಜೆಡಿಎಸ್‌ ಶಾಸಕ ಎಚ್.ಡಿ. ರೇವಣ್ಣ, ಪ್ರತಿ ತಾಲ್ಲೂಕಿಗೆ ತಲಾ ₹ 25 ಲಕ್ಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಅದಕ್ಕೆ ಮುಖ್ಯಮಂತ್ರಿ,‘ಈಗಾಗಲೇ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ₹ 50 ಲಕ್ಷವನ್ನು ಕೋವಿಡ್ ನಿರ್ವಹಣೆಗೆ ಬಳಕೆ ಮಾಡಲು ಈಗಾಗಲೇ ಅನುಮತಿ ನೀಡಲಾಗಿದೆ. ಅಲ್ಲದೆ ಗ್ರಾಮ ಪಂಚಾಯಿತಿಗಳಿಗೆ ತಲಾ ₹ 50 ಸಾವಿರ ಬಿಡುಗಡೆ ಮಾಡಲಾಗಿದೆ’ ಎಂದರು.

ವೈದ್ಯರ ಕೊರತೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ‘ಈಗಾಗಲೇ 1,200 ವೈದ್ಯರ ನೇಮಕ ಮಾಡಿಕೊಳ್ಳುತ್ತಿದ್ದು, ಶೀಘ್ರವೇ ಸಮಸ್ಯೆ ಬಗೆಹರಿಯಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT