ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಸುಬ್ಬಣ್ಣ ನಿಧನ: ಪ್ರಧಾನಿ ಮೋದಿ, ಬೊಮ್ಮಾಯಿ ಸೇರಿ ಗಣ್ಯರಿಂದ ಸಂತಾಪ

Last Updated 12 ಆಗಸ್ಟ್ 2022, 9:45 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಸುಗಮ ಸಂಗೀತದ ಪ್ರಸಿದ್ದ ಗಾಯಕರಾಗಿದ್ದ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಶಿವಮೊಗ್ಗ ಸುಬ್ಬಣ್ಣ ಅವರಿಗೆ 83 ವರ್ಷ ವಯಸ್ಸಾಗಿತ್ತು. ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಮಕ್ಕಳಾದ ಶ್ರೀರಂಗ ಮತ್ತು ಬಾಗೇಶ್ರೀ ಅವರನ್ನು ಅಗಲಿದ್ದಾರೆ.

‘ಶ್ರೇಷ್ಠ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಕನ್ನಡ ಹಾಡುಗಳು ಮತ್ತು ಸಂಗೀತಾಭಿಮಾನಿಗಳ ಮನೆಮಾತಾಗಿದ್ದರು. ಅವರ ಹಾಡುಗಳು ಅಪಾರ ಮೆಚ್ಚುಗೆ ಪಡೆದಿವೆ ಮತ್ತು ಕನ್ನಡ ಕಾವ್ಯದ ಮುತ್ತುಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನಗಳಾಗಿವೆ. ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

‘ಕನ್ನಡ ಭಾವಗೀತೆಗಳಿಗೆ ಜೀವತುಂಬಿದ, ಕನ್ನಡದ ಮೊದಲ ರಜತ ಕಮಲ ಪ್ರಶಸ್ತಿಗೆ ಭಾಜನರಾದ ಅಪ್ರತಿಮ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಗಲಿಕೆ ಕನ್ನಡ ಕಲಾ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

‘ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ದೇವರು ಅವರಿಗೆ ಸದ್ಗತಿಯನ್ನು ಕರುಣಿಸಲಿ, ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

‘ಕನ್ನಡದ ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದಿಂದ ಸಂಗೀತ ಲೋಕ ಮತ್ತು ಕನ್ನಡಿಗರಾದ ನಾವೆಲ್ಲರೂ ಸಿರಿಕಂಠವೊಂದನ್ನು ಕಳೆದುಕೊಂಡಿದ್ದೇವೆ. ಸುಬ್ಬಣ್ಣ ಅವರು ಹಾಡುಗಳ ಮೂಲಕ ನಮ್ಮೊಳಗೆ ಸದಾ ಜೀವಂತವಾಗಿರುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸುಗಮ ಸಂಗೀತ ಲೋಕದ ಅನನ್ಯ ಪ್ರತಿಭೆ, ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ. ಕುವೆಂಪು, ಬೇಂದ್ರೆ ಸೇರಿ ಹೆಸರಾಂತ ಕವಿಗಳ ಗೀತೆಗಳಿಗೆ ಸ್ವರ ಕಟ್ಟಿದ ಸುಬ್ಬಣ್ಣ ಅವರ ಅಗಲಿಕೆ ನಾಡಿಗೆ ಬಹದೊಡ್ಡ ನಷ್ಟ. ಸುಬ್ಬಣ್ಣ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT