ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳ ಗ್ರಾಮೀಣ ಪ್ರದೇಶದಲ್ಲಿ 7 ಗಂಟೆ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸಲಹೆ ನೀಡಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಇಂಧನ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ರಾಜ್ಯದ 15 ಜಿಲ್ಲೆಗಳಲ್ಲಿ ಮಾತ್ರ 7 ಗಂಟೆಗಳ ವಿದ್ಯುತ್ ಪೂರೈಕೆಯಾಗುತ್ತಿದೆ. ಉಳಿದ ಜಿಲ್ಲೆಗಳಲ್ಲಿ 5 ಗಂಟೆಯೂ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಈ ಅಸಮಾನತೆ ಹೋಗಲಾಡಿಸಲು ನೀಲನಕ್ಷೆಯನ್ನು ಸಿದ್ಧಪಡಿಸಿ ಕಾಲಮಿತಿಯಲ್ಲಿ ಯೋಜನಾ ಬದ್ಧವಾಗಿ ಕಾರ್ಯ ನಿರ್ಹವಹಿಸುವಂತೆ ಸೂಚನೆ ನೀಡಿದರು.
ವಿದ್ಯುತ್ ಸೋರಿಕೆಯನ್ನು ತಡೆಗಟ್ಟಿ ಒಟ್ಟಾರೆ ಇಂಧನ ವ್ಯವಸ್ಥೆಯ ಸುಧಾರಣೆಗೆ ಒತ್ತು ನೀಡಬೇಕು. ರಾಜ್ಯದಲ್ಲಿ ನವೀಕೃತ ಮೂಲಗಳ ಸ್ಥಾಪಿತ ಸಾಮರ್ಥ್ಯ 15,184.13 ಮೆ. ವ್ಯಾಟ್.ಗಳಿದ್ದು ದೇಶದಲ್ಲಿಯೇ ಕರ್ನಾಟಕ ಮುಂಚೂಣಿಯಲ್ಲಿದೆ. ಭವಿಷ್ಯದ ದೃಷ್ಟಿಯಿಂದ ನವೀಕೃತ ಇಂಧನಕ್ಕೆ ಆದ್ಯತೆ ನೀಡುವಂತೆ ಬೊಮ್ಮಾಯಿ ಸಲಹೆ ನೀಡಿದರು.
ಗಂಗಾ ಕಲ್ಯಾಣ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಲ್ಲಾ ಅಭಿವೃದ್ಧಿ ನಿಗಮಗಳು ಸೇರಿದಂತೆ ಒಟ್ಟು 18,569 ಕೊಳವೆಬಾವಿಗಳ ವಿದ್ಯುದೀಕರಣಗೊಳಿಸುವ ಗುರಿ ಇದೆ. ಇದಕ್ಕಾಗಿ ಪ್ರತಿ ಪಂಪ್ ಸೆಟ್ ವಿದ್ಯುದೀಕರಣಕ್ಕೆ ಬಿಡುಗಡೆ ಮಾಡುವ ₹ 50 ಸಾವಿರ ವೆಚ್ಚವನ್ನು ₹ 1.2 ಲಕ್ಷಕ್ಕೆ ಹೆಚ್ಚಿಸುವ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ವಿದ್ಯುತ್ ಕ್ಷೇತ್ರದಲ್ಲಿ ಸಾವಲಂಬಿ ಆಗುವುದರ ಜೊತೆಗೆ ಸಮರ್ಥವಾಗಿ ವಿದ್ಯುತ್ ನಿರ್ವಹಣೆಯನ್ನು ದೂರದೃಷ್ಟಿಯನ್ನು ಇಟ್ಟುಕೊಂಡು ಕೆಲಸ ಮಾಡುವಂತೆಯೂ ಸೂಚನೆ ನೀಡಿದರು.
ವಿದ್ಯುತ್ ಉತ್ಪಾದನೆ ಮತ್ತು ನಿರ್ವಹಣೆ ಇನ್ನು ಬಹಳ ವ್ಯವಸ್ಥಿತವಾಗಿ ಮಾಡಬೇಕು. ಮಾರುಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ ವಿದ್ಯುತ್ತನ್ನು ಮಾರಾಟ ಮಾಡುವಂತಾಗಬೇಕು. ಕರ್ನಾಟಕ ವಿದ್ಯುತ್ ನಿಗಮದಿಂದ ವಿದ್ಯುತ್ ಉತ್ಪಾದನೆ ಅತ್ಯಂತ ದಕ್ಷತೆಯಿಂದ ಆಗಬೇಕು. ಜಲ ಮತ್ತು ವಿದ್ಯುತ್ ಘಟಕಗಳು ಅತಿ ಹೆಚ್ಚು ಕಾರ್ಯ ಕ್ಷಮತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಿಸಲಾಗಿರುವ ಕೊಳವೆ ಬಾವಿಗಳಿಗೆ ಯಾವುದೇ ರೀತಿಯ ತಡ ಮಾಡದೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಕೋವಿಡ್ ಸಂದರ್ಭದಲ್ಲಿ ವಿಶೇಷವಾಗಿ ಆಸ್ಪತ್ರೆಗಳಿಗೆ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.
ಸಭೆಯಲ್ಲಿ ಇಂಧನ ಸಚಿವ ಸುನಿಲ್ಕುಮಾರ್, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಮತ್ತು ಹಿರಿಯ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.