ಬೆಂಗಳೂರು: ರಾಜ್ಯದ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ಸಾಫ್ಟ್ವೇರ್ ಕ್ಷೇತ್ರದಲ್ಲಿ ಅತಿ ಹೆಚ್ಚು ಹೂಡಿಕೆ ಬಂದಿದೆ. ಶೇ 58 ರಷ್ಟು ಹೂಡಿಕೆ ಹರಿದು ಬಂದಿದ್ದು, ಕರ್ನಾಟಕ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರದಿಂದ ದಾವೋಸ್ನಲ್ಲಿ ಆರಂಭವಾಗುವ ವಿಶ್ವ ಆರ್ಥಿಕ ಒಕ್ಕೂಟದ ವಾರ್ಷಿಕ ಸಮಾವೇಶದಲ್ಲಿ ಭಾಗಹಿಸಲು ತೆರಳುವುದಕ್ಕೆ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕದನಂತರದ ಸ್ಥಾನ ದೆಹಲಿ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ತಲಾ ಶೇ 17 ರಷ್ಟು ಹೂಡಿಕೆ ಆಗಿದೆ ಎಂದು ಅವರು ಹೇಳಿದರು.
‘ಕಳೆದ ನಾಲ್ಕು ತ್ರೈಮಾಸಿಕಕ್ಕೆ ಹೋಲಿಸಿದರೆ ಕೊನೆಯ ತ್ರೈಮಾಸಿಕದಲ್ಲಿ ದೇಶಕ್ಕೆ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಬಂದಿದೆ. ಇದರಲ್ಲಿ ಸಿಂಹಪಾಲು ಹೂಡಿಕೆ ಕರ್ನಾಟಕಕ್ಕೇ ಹರಿದು ಬಂದಿದೆ. ರಾಜ್ಯಕ್ಕೆ ಇನ್ನಷ್ಟು ಹೆಚ್ಚು ಪ್ರಮಾಣದ ವಿದೇಶಿ ಹೂಡಿಕೆಯನ್ನು ಸ್ವಾಗತಿಸುತ್ತೇನೆ. ಹೂಡಿಕೆದಾರರಿಗೆ ರಾಜ್ಯದಲ್ಲಿ ಅತ್ಯುತ್ತಮ ಗುಣಮಟ್ಟದ ಮೂಲ ಸೌಕರ್ಯವನ್ನು ಕ್ಷಿಪ್ರಗತಿಯಲ್ಲಿ ಕಲ್ಪಿಸಲು ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು. ‘ದಾವೋಸ್ ಆರ್ಥಿಕ ಸಮಾವೇಶದಲ್ಲಿ ವಿಶ್ವದ ಹೆಸರಾಂತ ಪ್ರಮುಖರು ಮತ್ತು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಾಗುವುದು. ವಿಶೇಷವಾಗಿ ನವೆಂಬರ್ನಲ್ಲಿ ರಾಜ್ಯದಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ದೊಡ್ಡ ಮಟ್ಟದಲ್ಲಿ ಪ್ರತಿಕ್ರಿಯೆ ಸಿಗುವ ವಿಶ್ವಾಸವಿದೆ’ ಎಂದೂ ತಿಳಿಸಿದರು.