ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ವರದಿ ಸಲ್ಲಿಸಲು ಯಡಿಯೂರಪ್ಪ ಸೂಚನೆ

Last Updated 8 ಅಕ್ಟೋಬರ್ 2020, 8:32 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ಕೇಂದ್ರಗಳನ್ನು ಗುರುತಿಸಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಸಮಗ್ರ ವರದಿಯೊಂದಿಗೆ ಅನುಮತಿ ಪಡೆಯಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

ಪ್ರವಾಸೋದ್ಯಮ ಇಲಾಖೆ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಈಗಾಗಲೇ ಗುರುತಿಸಲಾಗಿರುವ ಪ್ರವಾಸೋದ್ಯಮ ಕೇಂದ್ರಗಳ ಸಮಗ್ರ ಅಭಿವೃಧ್ಧಿಗೆ ಇರುವ ತೊಡಕುಗಳನ್ನು ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ಮುಖ್ಯಮಂತ್ರಿ ಅನುಮತಿ ನೀಡಿದರು. ಅಗತ್ಯ ತಿದ್ದುಪಡಿಯೊಂದಿಗೆ ಪ್ರಸ್ತಾವನೆಯನ್ನು ಮಂಡಿಸಲು ಮುಖ್ಯಮಂತ್ರಿ ಸೂಚಿಸಿದರು.

ಸಭೆಯ ಮುಖ್ಯಾಂಶಗಳು:

1. ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿರುವ ಜಿಲ್ಲೆಗಳನ್ನು ಗುರುತಿಸಿ ಅಧಿಕಾರಿಗಳನ್ನು ನಿಯೋಜಿಸುವಂತೆ ಸಚಿವ ಸಿ.ಟಿ. ರವಿ ಮುಖ್ಯಮಂತ್ರಿಯನ್ನು ಕೋರಿದರು. ಜಿಲ್ಲೆಗಳಲ್ಲಿ ಅಧಿಕಾರಿಗಳಿಲ್ಲದೆ ಪ್ರಗತಿ ಪರಿಶೀಲನೆ ಅಸಾಧ್ಯವಾಗಿದೆ ಎಂಬ ಅಂಶವನ್ನು ಅವರು ಈ ಸಂದರ್ಭದಲ್ಲಿ ಮುಖ್ಯಮಂತ್ರಿಯ ಗಮನಕ್ಕೆ ತಂದರು.

2. ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿರುವ ಜಿಲ್ಲೆಗಳಲ್ಲಿ ಕೆ.ಎ.ಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಪ್ರಭಾರವನ್ನು ನೀಡಬಹುದಾಗಿದೆ ಎಂದು ಅವರು ಹೇಳಿದರು.

3. ಪ್ರವಾಸೋದ್ಯಮಕ್ಕೆ ಉತ್ತೇಜನ ಇಲಾಖೆಯ ಮುಖ್ಯ ಧ್ಯೇಯವಾಗಬೇಕಿದ್ದು, ಅಭಿವೃದ್ಧಿ ತಾಣಗಳ ಗುರುತಿಸುವಿಕೆ, ನಿರ್ವಹಣೆ, ಸಂರಕ್ಷಣೆ ಆದ್ಯತೆಯಾಗಬೇಕು.

4. ಯೋಜನೆಯನ್ನು ಪರಿಪೂರ್ಣವಾಗಿ ಕೈಗೊಂಡು ಮುಗಿಸಬೇಕು, ಆಗ ಮಾತ್ರ ರಾಜ್ಯದ ಪ್ರವಾಸೋದ್ಯಮದಲ್ಲಿ ಅಭಿವೃದ್ದಿಯಲ್ಲಿ ಹೊಸ ಶಕೆಯನ್ನು ನಿರೀಕ್ಷಿಸಬಹುದು.

5. ಜೋಗ ಜಲಪಾತ 120 ಕೋಟಿ ರೂಪಾಯಿಯ ಯೋಜನೆ ಕೆ.ಪಿ.ಸಿ.ಎಲ್ ಮೂಲಕ ಅನುಷ್ಠಾನಕ್ಕೆ ತರಲಾಗುವುದು. ಈ ತಿಂಗಳ ಅಂತ್ಯದೊಳಗೆ ಯೋಜನೆಯ ವೆಚ್ಚವನ್ನು ಅಂತಿಮಗೊಳಿಸಲಾಗುವುದು ಎಂದು ಸರ್ಕಾರದ ಹೆಚ್ವುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮಾಹಿತಿ ನೀಡಿದರು.

6. ಕೆಮ್ಮಣ್ಣುಗುಂಡಿ ಮತ್ತು ನಂದಿ ಬೆಟ್ಟದ ಸಮಗ್ರ ಅಭಿವೃದ್ಧಿಯ ಹೊಣೆಯನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸುವಂತೆ ಪ್ರವಾಸೋದ್ಯಮ ಸಚಿವರು ಸಲಹೆ ಮಾಡಿದರು.

7. ಬಾದಾಮಿ ಅಭಿವೃದ್ಧಿ ಆದ್ಯತೆಯ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಅಂತರರಾಷ್ಟ್ರೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಈ ತಾಣದಲ್ಲಿ ವಿಶ್ವಮಟ್ಟದ ಸೌಲಭ್ಯಗಳನ್ನು ಕಲ್ಪಿಸಲು ಎ.ಪಿ.ಎಂ.ಸಿ ಭೂಮಿಯನ್ನು ಕೆ.ಎಸ್.ಟಿ.ಡಿ.ಸಿ ಗೆ ಹಸ್ತಾಂತರ ಮಾಡಿ ವಾಹನ ನಿಲ್ದಾಣ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬಹುದು.

8. ಶ್ರೀರಂಗಪಟ್ಟಣ ಹಾಗೂ ಮೈಸೂರು ಹಾಥ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಿತು.

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಕೆ.ಎಸ್.ಟಿ.ಡಿ.ಸಿ ಅಧ್ಯಕ್ಷರಾದ ಶೃತಿ, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT