ಬೆಂಗಳೂರು: ‘ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಸರ್ಕಾರ ಮತ್ತಷ್ಟು ದೃಢ ಹೆಜ್ಜೆಗಳನ್ನು ಇಡಲಿದೆ’ ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಭಾರತೀಯ ಶಿಕ್ಷಣ ಮಂಡಲದ ಕರ್ನಾಟಕ ಉತ್ತರ ಪ್ರಾಂತ ಹಾಗೂ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ‘ವಿಶ್ವವಿದ್ಯಾಲಯಗಳ ಏಳಿಗೆಯಲ್ಲಿ ಪ್ರಾಧಿಕಾರಿಗಳ ಪಾತ್ರ’ ವಿಷಯ ಕುರಿತ ಆನ್ಲೈನ್ ವಿಚಾರ ಸಂಕಿರಣದಲ್ಲಿ ಮುಖ್ಯಭಾಷಣ ಮಾಡಿದ ಅವರು, ‘ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಎಲ್ಲ ಅಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು’ ಎಂದರು.
‘ಶಿಕ್ಷಣ ವ್ಯವಸ್ಥೆಯನ್ನು ಉನ್ನತಿಯತ್ತ ಕೊಂಡೊಯ್ಯಬೇಕಾದರೆ ನಾನು ಎನ್ನುವುದನ್ನು ಬಿಟ್ಟು ನಾವು ಎಂಬ ವಿಶಾಲ ತತ್ವದೊಂದಿಗೆ ಸಾಗಬೇಕು. ಆಗ ಮಾತ್ರ ಉತ್ತಮ ಫಲಿತಾಂಶ ಸಾಧಿಸಲು ಸಾಧ್ಯವಾಗುತ್ತದೆ. ವಿಶಾಲ ತಳಹದಿ ಮೇಲೆ ಕೆಲಸ ಮಾಡುತ್ತಿರುವ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಇಂಥ ನಡವಳಿಕೆಯಿಂದ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ’ ಎಂದರು.
ಶೈಕ್ಷಣಿಕ ಸುಧಾರಣೆಗಳು: ‘ಶೈಕ್ಷಣಿಕವಾಗಿ ಕಳೆದ ಒಂದು ವರ್ಷದಲ್ಲಿ ಅನೇಕ ದಿಟ್ಟ ಹೆಜ್ಜೆಗಳನ್ನು ಸರ್ಕಾರದ ಇಟ್ಟಿದೆ. ಆದ್ಯತೆಯ ಮೇರೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ. ಎಲ್ಲ ದೃಷ್ಟಿಕೋನದಲ್ಲಿ ನೋಡಿದರೂ ಕರ್ನಾಟಕಕ್ಕೆ ಈ ನೀತಿ ದೊಡ್ಡ ಕಾಣಿಕೆ ನೀಡಲಿದೆ’ ಎಂದರು.
‘ಸರ್ಕಾರವು ಶಿಕ್ಷಣ ನೀತಿಯನ್ನು ಅತ್ಯಂತ ಬದ್ಧತೆಯಿಂದ ಜಾರಿ ಮಾಡಲು ಮುಂದಾಗಿದೆ. ಈಗಾಗಲೇ ನೀತಿಯ ಜಾರಿಗೆ ಬೇಕಾದ ಕಾನೂನಾತ್ಮಕ-ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಲಾಗುತ್ತಿದೆ. 2021ರ ಹೊತ್ತಿಗೆ ನೀತಿಯ ಜಾರಿ ಹಂತಹಂತವಾಗಿ ಆರಂಭವಾಗುತ್ತದೆ’ ಎಂದೂ ಹೇಳಿದರು.
‘ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಪ್ರಾಧಿಕಾರಿಗಳ ಪಾತ್ರ ಬಹುಮುಖ್ಯವಾದದ್ದು. ಅದರಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಅತ್ಯಂತ ಜವಾಬ್ದಾರಿಯಂದ ಕೆಲಸ ಮಾಡಬೇಕಾಗುತ್ತದೆ. ಆ ನೀತಿಯ ಆಶಯಕ್ಕೆ ತಕ್ಕಂತೆ ಹೆಜ್ಜೆಗಳನ್ನು ಇಡಬೇಕಾಗುತ್ತದೆ’ ಎಂದು ಕಿವಿಮಾತು ಹೇಳಿದರು.
‘ಮುಂದಿನ ಕೆಲವು ವರ್ಷಗಳಲ್ಲಿ ಭಾರತವನ್ನು ಎಲ್ಲ ರೀತಿಯಲ್ಲೂ ಬದಲಿಸುವ ಶಕ್ತಿ ಶಿಕ್ಷಣ ನೀತಿಗೆ ಇದೆ. ಸಾಮಾಜಿಕ, ಆರ್ಥಿಕ ಬದಲಾವಣೆಗಳಿಗೆ ಕಾರಣವಾಗಲಿದೆ. ಹೀಗಾಗಿ, ನೀತಿಯ ಜಾರಿಯಲ್ಲಿ ನಾವೆಲ್ಲರೂ ಯೋಧರಂತೆ ಕೆಲಸ ಮಾಡಬೇಕು. ಮುಖ್ಯವಾಗಿ ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು’ ಎಂದರು.
ಕುಶಭಾವು ಠಾಕರೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಸಚ್ಚಿದಾನಂದ ಜೋಶಿ ಪ್ರಧಾನ ಭಾಷಣ ಮಾಡಿದರೆ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಪ್ರಮೋದ ಗಾಯಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಾಮಚಂದ್ರ ಗೌಡ ಮಾತನಾಡಿದರು. ವಿಜಯಪುರದ ಬಿಎಲ್ಡಿಇ ವೈದ್ಯಕೀಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಸತೀಶ್ ಜಿಗಜಿನ್ನಿ ಅಧ್ಯಕ್ಷತೆ ವಹಿಸಿದ್ದರು.
ಏನಿದು ಭಾರತೀಯ ಶಿಕ್ಷಣ ಮಂಡಲ?: ಇದೊಂದು ರಾಷ್ಟ್ರೀಯ ಮಟ್ಟದ ಸಂಸ್ಥೆಯಾಗಿದ್ದು, ಶಿಕ್ಷಣದ ಅಭಿವೃದ್ಧಿ ದಿಸೆಯಲ್ಲಿ ಕೆಲಸ ಮಾಡುತ್ತಿದೆ. ಭಾರತೀಯ ಶಿಕ್ಷಣ ಪದ್ಧತಿ, ಪರಂಪರೆ ಹಾಗೂ ಸಂಸ್ಕಾರಗಳ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ಈ ಸಂಸ್ಥೆ ಮಾಡುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.