ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಕೊರತೆ ಎರಡು ದಿನಗಳಲ್ಲಿ ಪರಿಹಾರ: ಇಂಧನ ಸಚಿವ ವಿ. ಸುನೀಲ್ ಕುಮಾರ್

Last Updated 11 ಅಕ್ಟೋಬರ್ 2021, 16:21 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಉಂಟಾಗಿರುವ ಕಲ್ಲಿದ್ದಲು ಕೊರತೆಯ ಸಮಸ್ಯೆ ಎರಡು ದಿನಗಳಲ್ಲಿ ಪರಿಹಾರವಾಗಲಿದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದರು.

ಕೆಪಿಟಿಸಿಎಲ್ ಕಚೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕಿರಿಯ ಪವರ್ ಮ್ಯಾನ್‌ಗಳಿಗೆ ನೇಮಕಾತಿ ಪತ್ರ ವಿತರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಡಿಶಾದ ಮಹಾನಂದಿ ಗಣಿಯಿಂದ ಕಲ್ಲಿದ್ದಲು ತುಂಬಿಕೊಂಡು ಹೊರಟಿರುವ ಒಂದು ರೇಕ್ ಮಂಗಳವಾರ ರಾಜ್ಯಕ್ಕೆ ತಲುಪಲಿದೆ. ಮತ್ತೊಂದು ರೇಕ್ ಬುಧವಾರ ಬರಲಿದೆ. ಇದರಿಂದ ಸಮಸ್ಯೆಗೆ ಪರಿಹಾರ ಸಿಗಲಿದೆ’ ಎಂದರು.

ಸದ್ಯ ಹತ್ತು ರೇಕ್ ಕಲ್ಲಿದ್ದಲು ಪೂರೈಕೆ ಆಗುತ್ತಿತ್ತು. ಅದನ್ನು 14 ರೇಕ್‌ಗಳಿಗೆ ಹೆಚ್ಚಿಸಲು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಮಾಡಲಾಗಿದೆ. ಎರಡು ರೇಕ್ ತಕ್ಷಣ ಬರಲಿದ್ದು, ಇನ್ನೆರಡು ರೇಕ್‌ಗಳನ್ನು ನವೆಂಬರ್ ತಿಂಗಳಲ್ಲಿ ನೀಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಕಲ್ಲಿದ್ದಲು ಕೊರತೆಯಿಂದ ಸಮಸ್ಯೆ ಆಗಬಹುದು ಎಂಬ ಆತಂಕವಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ದೆಹಲಿಗೆ ತೆರಳಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಿದೆ ಎಂದರು.

ಕೆಲವು ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆಯ ಅವಧಿಯನ್ನು ತುಸು ಕಡಿಮೆ ಮಾಡಲಾಗಿತ್ತು. ಯಾವುದೇ ಉಷ್ಣ ವಿದ್ಯುತ್ ಸ್ಥಾವರದಲ್ಲೂ ಉತ್ಪಾದನೆ ಸಂಪೂರ್ಣ ಸ್ಥಗಿತವಾಗಿರಲಿಲ್ಲ ಎಂದು ತಿಳಿಸಿದರು.

ಮಹಾರಾಷ್ಟ್ರದ ಮಂದಾಕಿನಿ ಮತ್ತು ಬಾರಂಜಿಯಲ್ಲಿ ರಾಜ್ಯಕ್ಕೆ ಹಂಚಿಕೆ ಮಾಡಿರುವ ಕಲ್ಲಿದ್ದಲು ಗಣಿಗಳಲ್ಲಿ ಉತ್ಪಾದನೆ ಆರಂಭಿಸಲು ಅರಣ್ಯ ಇಲಾಖೆಯ ಅನುಮತಿ ಬೇಕಿದೆ. ಅದನ್ನು ಕೊಡಿಸುವಂತೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮನವಿ ಮಾಡಲಾಗಿದೆ. ಅನುಮತಿ ದೊರತರೆ ಕಲ್ಲಿದ್ದಲು ತೆಗೆಯಲು ಅಗತ್ಯವಿರುವ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ ಎಂದು ಸುನೀಲ್ ಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT