ನವದೆಹಲಿ: ಕರ್ನಾಟಕದಲ್ಲಿ ಮೂರು ವರ್ಷಗಳಲ್ಲಿ ನಡೆದ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ 100 ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದ್ದು, ಐದು ಪ್ರಕರಣಗಳಲ್ಲಷ್ಟೇ ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿದೆ.
ಲೋಕಸಭೆಯಲ್ಲಿ ಸದಸ್ಯ ಡ್ಯಾನಿಷ್ ಅಲಿ ಕೇಳಿರುವ ಪ್ರಶ್ನೆಗೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಲಿಖಿತ ಉತ್ತರ ನೀಡಿದ್ದಾರೆ. ದೇಶದಲ್ಲಿನ ಅಪರಾಧ ಪ್ರಕರಣಗಳ ಬಗ್ಗೆ 2020ರ ವರೆಗೆ ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯುರೊ (ಎನ್ಸಿಆರ್ಬಿ) ಸಿದ್ಧಪಡಿಸಿದ್ದು, ಅದರ ಆಧಾರದಲ್ಲಿ ಈ ವಿವರ ನೀಡಲಾಗಿದೆ ಎಂದು ಅವರು ಉತ್ತರಿಸಿದ್ದಾರೆ.
2018ರಲ್ಲಿ 29 ಪ್ರಕರಣಗಳು ದಾಖಲಾಗಿ 224 ಮಂದಿಯನ್ನು ಬಂಧಿಸಲಾಗಿತ್ತು. 62 ಆರೋಪ ಪಟ್ಟಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಎರಡು ಪ್ರಕರಣಗಳಲ್ಲಿ 9 ಅಪರಾಧಿಗಳಿಗೆ ಶಿಕ್ಷೆ ಆಗಿದೆ.
2019ರಲ್ಲಿ 11 ಪ್ರಕರಣಗಳಲ್ಲಿ ಎಫ್ಐಆರ್ ದಾಖಲಾಗಿ, 77 ಮಂದಿಯನ್ನು ಬಂಧಿಸಲಾಗಿತ್ತು. 22 ಆರೋಪ ಪಟ್ಟಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಒಂದು ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಶಿಕ್ಷೆ ನೀಡಲಾಗಿದೆ ಎಂದು ಅವರು ಉತ್ತರದಲ್ಲಿ ತಿಳಿಸಿದ್ದಾರೆ.
2020ರಲ್ಲಿ 10 ಪ್ರಕರಣಗಳಲ್ಲಿ ಎಫ್ಐಆರ್ ದಾಖಲಾಗಿ, 16 ಆರೋಪ ಪಟ್ಟಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. 63 ಮಂದಿಯನ್ನು ಬಂಧಿಸಲಾಗಿದ್ದು, 151 ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಿದ್ಧಪಡಿಸಲಾಗಿತ್ತು. ಎರಡು ಪ್ರಕರಣಗಳಲ್ಲಿ 54 ಮಂದಿಗೆ ಶಿಕ್ಷೆ ಆಗಿದೆ ಎಂದು ಅವರು ವಿವರ ನೀಡಿದ್ದಾರೆ.