ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಹೇಳುವ ಮೂಲಕ ಬಿಜೆಪಿಯ ಮೂಲ ತತ್ವ ಎತ್ತಿ ಹಿಡಿದ ಬೊಮ್ಮಾಯಿ: ಸಿದ್ದರಾಮಯ್ಯ

Last Updated 6 ಡಿಸೆಂಬರ್ 2021, 9:19 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಸುಳ್ಳುಗಳನ್ನು ಹೇಳುತ್ತಿದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೇ ಸತ್ಯವೆಂದು ನಂಬಿಸುವುದು ಬಿಜೆಪಿಯವರ ಹುಟ್ಟುಗುಣ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿಎಂ ಬೊಮ್ಮಾಯಿ ಅವರನ್ನು#ಬುರುಡೆಬೊಮ್ಮಾಯಿ ಎಂದು ಉಲ್ಲೇಖಿಸಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರುನಿರಂತರ ಸುಳ್ಳು ಹೇಳುವ ಮೂಲಕ ಬಿಜೆಪಿಯಮೂಲ ತತ್ವವನ್ನು ಎತ್ತಿಹಿಡಿದಿದ್ದಾರೆ ಎಂದು ಟೀಕಿಸಿದ್ದಾರೆ.

ಮುಂದುವರಿದು, 'ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಕ್ಕೆ ಕೊಂಡೊಯ್ಯುವ ಕಾಳಜಿಯನ್ನು ಬೊಮ್ಮಾಯಿಅವರು ತೋರಿಸುತ್ತಾರೆ ಎನ್ನುವ ನಿರೀಕ್ಷೆ ನನ್ನಲ್ಲಿ ಇತ್ತು. ಆ ನಿರೀಕ್ಷೆಗಳೆಲ್ಲ ಈಗ ಹುಸಿಯಾಗಿದೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, 'ನಮ್ಮ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಬಗ್ಗೆ ಆಗಾಗ್ಗೆ ಪ್ರಶ್ನೆ ಕೇಳುವ, ಸುಳ್ಳು ಹೇಳುವಬೊಮ್ಮಾಯಿಅವರಿಗೆ ಮುಖ್ಯಮಂತ್ರಿಯಾಗಿದ್ದೂ ಮಾಹಿತಿ ತರಿಸಿಕೊಳ್ಳಲು ಕಷ್ಟವಾಗುತ್ತಿದೆಯೇ ಅಥವಾ ಮುಖ್ಯಮಂತ್ರಿಗಳು ಕೇಳಿದರೂ ಇಲಾಖೆಗಳೇ ಮಾಹಿತಿ ನೀಡುತ್ತಿಲ್ಲವೇ?' ಎಂದು ಪ್ರಶ್ನಿಸಿದ್ದಾರೆ.

'2013ರಿಂದ 2018ರ ಮಾರ್ಚ್ ವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ ರೂ. 16,775 ಕೋಟಿ ವೆಚ್ಚದಲ್ಲಿ 15 ಲಕ್ಷ ಮನೆಗಳನ್ನು ವಸತಿ ರಹಿತರಿಗಾಗಿ ನಿರ್ಮಾಣ ಮಾಡಿಕೊಟ್ಟಿದ್ದೆವು. ಈ ಮಾಹಿತಿಯನ್ನು ವಸತಿ ಸಚಿವ ಸೋಮಣ್ಣನವರ ಕಛೇರಿಯಿಂದಲೆ ನನಗೆ ಲಿಖಿತವಾಗಿ ಕಳಿಸಿದ್ದಾರೆ.ನಿಮಗೊಂದು ಪ್ರತಿ ತರಿಸಿ ಕೊಡಲೇ? ಎಂದು ತಿವಿದಿದ್ದಾರೆ.

'ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಒಳಗೊಂಡಂತೆ 32 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ. ಬೊಮ್ಮಾಯಿಅವರೇ ನಿಮ್ಮ ಸರ್ಕಾರದ ಸಾಧನೆ ಇನ್ನೂ ಸೊನ್ನೆಯಲ್ಲೇ ಭದ್ರವಾಗಿ ಕೂತಿದೆ ಅಲ್ಲವೇ?' ಎಂದು ಮತ್ತೊಂದು ಪ್ರಶ್ನೆ ಎಸೆದಿದ್ದಾರೆ.

'ನಾನು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಿಕಾಸ ಮತ್ತು ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಜಾರಿಗೆ ತಂದು, ಈ ಯೋಜನೆಗಳಡಿ 1,750 ಕೋಟಿ ರೂಪಾಯಿಗಳನ್ನು ನೀಡಿ 2,000 ಗ್ರಾಮಗಳನ್ನು ಅಭಿವೃದ್ಧಿಪಡಿಸಿದ್ದೆ.ಇಂತಹ ಜನಪರ ಯೋಜನೆ ನಿಲ್ಲಿಸಿದ್ದು ನಿಮ್ಮದೇ ಸರ್ಕಾರ ಅಲ್ಲವೇ?' ಎಂದೂ ತಿವಿದಿದ್ದಾರೆ.

ಕಾಮಗಾರಿಗಳಲ್ಲಿ ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪ ಸರ್ಕಾರದ ವಿರುದ್ಧ ಇತ್ತೀಚೆಗೆ ಕೇಳಿ ಬಂದಿತ್ತು. ಇದನ್ನು ಉಲ್ಲೇಖಿಸಿ ಚಾಟಿ ಬೀಸಿರುವ ಸಿದ್ದರಾಮಯ್ಯ, 'ಅಮೃತ ಯೋಜನೆಯಡಿ ಆಯ್ದ ಗ್ರಾಮಗಳಿಗೆ ಕೇವಲ 25 ಲಕ್ಷ ರೂಪಾಯಿ ನೀಡುತ್ತೇವೆಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳುತ್ತಾರೆ. 25 ಲಕ್ಷ ರೂಪಾಯಿಗಳಲ್ಲಿ ಶೇ 40 ರಷ್ಟು ನಿಮ್ಮ ಸರ್ಕಾರದ ಸಚಿವರು, ಅಧಿಕಾರಿಗಳಿಗೆ ಕಮಿಷನ್ ಹೋದರೆ ಗ್ರಾಮಗಳ ಅಭಿವೃದ್ಧಿಗೆ ಉಳಿಯುವ ಹಣ ಎಷ್ಟು?' ಎಂದು ಕೇಳಿದ್ದಾರೆ.

'ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಗ್ರಾಮೀಣ ರಸ್ತೆಗಳಿಗೆಂದು 1,350 ಕೋಟಿ ನೀಡುವುದಾಗಿ ಆದೇಶ ಹೊರಡಿಸಿದ್ದರು. ಆದರೆ ಇದುವರೆಗೆ ಒಂದು ರೂಪಾಯಿಯನ್ನು ಬಿಡುಗಡೆ ಮಾಡಿಲ್ಲ.ಬರಿ ಘೋಷಣೆಗಳಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವೇಬೊಮ್ಮಾಯಿಅವರೇ?'

'ನಮ್ಮ ಸರ್ಕಾರದ ಅವಧಿಯಲ್ಲಿ ಗ್ರಾಮ ಪಂಚಾಯತಿ ನೌಕರರಿಗೆ ಸಂಬಳ ನೀಡಲೆಂದು ಪ್ರತಿ ವರ್ಷ 912 ಕೋಟಿ ರೂ.ಗಳನ್ನು ತೆಗೆದಿಡುತ್ತಿದ್ದೆವು. ಅದರಿಂದ ಸಾವಿರಾರು ನೌಕರರಿಗೆ ಅನುಕೂಲವಾಗಿತ್ತು.ನಮ್ಮದು ಬಿಜೆಪಿಸರ್ಕಾರದಂತೆ ಬರೀ ಘೋಷಣೆಯಾಗಿ ಉಳಿದಿಲ್ಲ, ಸಾಧನೆಗಳಾಗಿವೆ' ಎಂದು ಬೆನ್ನು ತಟ್ಟಿಕೊಂಡಿದ್ದಾರೆ.

'ಗ್ರಾಮ ಪಂಚಾಯತಿಗಳಿಗೆ ಅನುದಾನ ಬರಲು ಆರಂಭವಾಗಿದ್ದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ನರೇಗಾ ಯೋಜನೆ ಪ್ರಾರಂಭಿಸಿದ ಮೇಲೆ.ನರೇಗಾ ಯೋಜನೆಯನ್ನು ಗುಜರಾತಿನ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಅವರು ವಿರೋಧಿಸಿದ್ದರು ಎಂಬ ಸತ್ಯವನ್ನು ಬಿಜೆಪಿ ನಾಯಕರುಮರೆಯಬಾರದು' ಎಂದು ಕಿವಿಮಾತು ಹೇಳಿದ್ದಾರೆ.

'ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 3 ಕೋಟಿಗೂ ಹೆಚ್ಚು ಜನ ಬಿಪಿಎಲ್ ಕಾರ್ಡುದಾರರಿದ್ದಾರೆ. ಅದರಲ್ಲಿ 1 ಕೋಟಿ ಜನರಿಗೆ 100 ಮಾನವ ದಿನಗಳಷ್ಟು ಕೆಲಸ ಕೊಟ್ಟರೆ 100 ಕೋಟಿ ಮಾನವ ದಿನಗಳ ಗುರಿ ನೀಡಬೇಕಾಗುತ್ತದೆ. ಆದರೆ ರಾಜ್ಯಕ್ಕೆ 13 ಕೋಟಿ ಮಾನವ ದಿನಗಳ ಗುರಿಯನ್ನು ನೀಡಲಾಗುತ್ತಿದೆ.ಈಗಿರುವ ಗುರಿ ಕೇವಲ 13 ಲಕ್ಷ ಜನರಿಗೆ ಮಾತ್ರ ಸಾಕಾಗುತ್ತಿದೆ. ರಾಜ್ಯದಲ್ಲಿ ಆರ್ಥಿಕ ವರ್ಷ ಮುಗಿಯಲು ಇನ್ನೂ 6 ತಿಂಗಳಿದ್ದಾಗಲೆ ನರೇಗಾ ಟಾರ್ಗೆಟ್ ಮುಗಿದು ಹೋಗಿದೆ.ಬೊಮ್ಮಾಯಿಅವರು ಸುಳ್ಳು ಹೇಳಿಕೊಂಡು ಓಡಾಡುವ ಬದಲು ದೆಹಲಿಗೆ ಹೋಗಿ ನರೇಗಾ ಯೋಜನೆಗೆ ಬೇಡಿಕೆ ಆಧಾರಿತವಾಗಿ ಹೊಸ ಗುರಿ ನಿಗದಿ ಮಾಡಿಸಿಕೊಂಡು ಬರಲಿ'ಎಂದು ಕೇಂದ್ರ ಸರ್ಕಾರದ ವಿರುದ್ಧವೂ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT